ಭಾನುವಾರ, ಏಪ್ರಿಲ್ 12, 2026

ಗ್ರಾಮೀಣಾಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅನನ್ಯ: ನಾಗವೇಣಿ ಅಭಿಮತ.

ಚಿತ್ತಾಪುರ: "ಗ್ರಾಮೀಣ ಭಾಗದ ಆರ್ಥಿಕ ಮತ್ತು ಸಾಮಾಜಿಕ ಬದಲಾವಣೆಯಲ್ಲಿ ಮಹಿಳೆಯರ ಪಾತ್ರ ಬಹಳ ದೊಡ್ಡದಿದೆ. ಹೀಗಾಗಿ ಗ್ರಾಮೀಣಾಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅನನ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ನಾಗವೇಣಿ ಅಭಿಮತ ವ್ಯಕ್ತಪಡಿಸಿದರು.

 ಪಟ್ಟಣದ ಬಸವೇಶ್ವರ ವಿದ್ಯಾ ಸಂಸ್ಥೆಯಲ್ಲಿ ರೇವಣಸಿದ್ದಪ್ಪ ಕಾಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸ್ನಾತಕೋತ್ತರ ಹಾಗೂ ಸಂಶೋಧನಾ ಕೇಂದ್ರ ಹಾಗೂ ಗುಲ್ಬರ್ಗ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 2025-26ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ (NSS) ವಾರ್ಷಿಕ ವಿಶೇಷ ಶಿಬಿರದ 4ನೇ ದಿನದ ಗ್ರಾಮೀಣ ಅಭಿವೃದ್ಧಿಯಲ್ಲಿ ಸ್ತ್ರೀಶಕ್ತಿಯ ಪಾತ್ರ' ಎಂಬ ವಿಷಯದ ಕುರಿತು ನಡೆದ ವಿಶೇಷ ಉಪನ್ಯಾಸ ಮಾಲೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸ್ತ್ರೀಶಕ್ತಿ ಸಂಘಗಳ ಮೂಲಕ ಮಹಿಳೆಯರು ಇಂದು ಸ್ವಾವಲಂಬಿಗಳಾಗುತ್ತಿದ್ದು, ಹಳ್ಳಿಗಳ ಸಮಗ್ರ ಅಭಿವೃದ್ಧಿಗೆ ಶಕ್ತಿಯಾಗಿ ನಿಂತಿದ್ದಾರೆ," ಎಂದು ತಿಳಿಸಿದರು.
ಮತ್ತೊಬ್ಬ ಮುಖ್ಯ ಅತಿಥಿ, ಉದಯಕಾಲ ವರದಿಗಾರ ಜಗದೇವ ಕುಂಬಾರ ಅವರು ಮಾತನಾಡಿ, "ಗ್ರಾಮೀಣಾಭಿವೃದ್ಧಿ ಎಂದರೆ ಕೇವಲ ರಸ್ತೆ, ಚರಂಡಿ ನಿರ್ಮಾಣವಲ್ಲ; ಅದು ಮಹಿಳೆಯರ ಬೌದ್ಧಿಕ ಮತ್ತು ಆರ್ಥಿಕ ಸುಧಾರಣೆಯನ್ನೂ ಒಳಗೊಂಡಿದೆ. ಸ್ತ್ರೀಶಕ್ತಿ ಗುಂಪುಗಳು ಗ್ರಾಮೀಣ ಭಾಗದ ಅರ್ಥವ್ಯವಸ್ಥೆಯ ಬೆನ್ನೆಲುಬಾಗಿವೆ," ಎಂದು ಅಭಿಪ್ರಾಯಪಟ್ಟರು.

ಉಪನ್ಯಾಸಕ ನರಸಪ್ಪ ಚಿನ್ನಕಟ್ಟಿ ಅವರು ವಿಶೇಷ ಉಪನ್ಯಾಸ ನೀಡಿ, ಶಿಬಿರಾರ್ಥಿಗಳಿಗೆ ಗ್ರಾಮೀಣಾಭಿವೃದ್ಧಿಯಲ್ಲಿ ಯುವಜನತೆ ಮತ್ತು ಸ್ತ್ರೀಶಕ್ತಿ ಹೇಗೆ ಕೈಜೋಡಿಸಬಹುದು ಎಂಬ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಸೂಗುರೇಶ್ವರ ವಹಿಸಿದ್ದರು. ವೇದಿಕೆಯಲ್ಲಿ ಅಗ್ನಿಶಾಮಕ ದಳದ ಠಾಣಾಧಿಕಾರಿ ನಾಗರಾಜ್, ಅಗ್ನಿಶಾಮಕ ಸಿಬ್ಬಂದಿಗಳಾದ ಕಾಶಿನಾಥ್, ಮಹಮ್ಮದ್ ಸಲೀಂ ಹಾಗೂ ಉಪನ್ಯಾಸಕ ರುದ್ರ ಕುಮಾರ್ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಅಧಿಕಾರಿಗಳಾದ ಉಪನ್ಯಾಸಕ ಮರೆಪ್ಪ ಮೇತ್ರಿ, ಮಲ್ಲಪ್ಪ ಮಾನೆಗರ್, ಡಾ. ಶಶಿಧರ್ ಯಡ್ರಾಮಿ, ಇದ್ದರು.

ಪೂಜಾ ಕಾರ್ಯಕ್ರಮವನ್ನು ನಿರೂಪಿಸಿದರು, ತುಳಸಿ ಸ್ವಾಗತಿಸಿದರು ಮತ್ತು ಗೌರಮ್ಮ ವಂದನಾರ್ಪಣೆ ಮಾಡಿದರು. ಶಿಬಿರದಲ್ಲಿ ನೂರಾರು ಎನ್‌ಎಸ್‌ಎಸ್ ಸ್ವಯಂಸೇವಕರು ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಖರ್ಗೆ ಹೇಳಿಕೆ ಹಿಂದೂ ಸಂಪ್ರದಾಯಕ್ಕೆ ಅವಮಾನ: ಇಬ್ರಾಹಿಂ ದಿಗ್ಗಾಂವ್ ಕಿಡಿ.

ಚಿತ್ತಾಪುರ: ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಇತ್ತೀಚೆಗೆ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅನ್ನು 'ವಿಷಕಾರಿ ಹಾವುಗಳು' ಎಂದು ಹೋಲಿಸಿರುವ ಹೇಳಿಕೆಯನ್ನು ಬಿಜೆಪಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಬ್ರಾಹಿಂ ದಿಗ್ಗಾಂವ್ ಬಲವಾಗಿ ಖಂಡಿಸಿದ್ದಾರೆ.

ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಖರ್ಗೆಯವರ ಹೇಳಿಕೆಯು ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ತರುವಂತದ್ದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ "ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅನ್ನು ವಿಷಕಾರಿ ಹಾವುಗಳೆಂದು ಕರೆದು ಅವುಗಳನ್ನು ಹೊಡೆದು ಕೊಲ್ಲಬೇಕು ಎನ್ನುವ ಹೇಳಿಕೆ ಹಿಂದೂ ನಂಬಿಕೆ ಮತ್ತು ಸಂಪ್ರದಾಯಗಳಿಗೆ ಮಾಡಿದ ಅವಮಾನವಾಗಿದೆ. ಇಸ್ಲಾಂ ಧರ್ಮದ ಕುರಾನ್‌ನಲ್ಲಿ ನಮಾಜ್ ಮಾಡುವಾಗ ಹಾವು ಬಂದರೆ ಸಾಯಿಸಿ ಎಂದು ಹೇಳಲಾಗಿದೆ, ಆದರೆ ರಾಜಕೀಯ ಪಕ್ಷಗಳನ್ನು ಹಾವಿಗೆ ಹೋಲಿಸಿ ಕೊಲ್ಲಲು ಪ್ರಚೋದನೆ ನೀಡುವುದು ಅಕ್ಷಮ್ಯ ಅಪರಾಧ," ಎಂದು ಹೇಳಿದರು.

"ಖರ್ಗೆಯವರ ರಾಜಕೀಯ ಅನುಭವದಷ್ಟು ನನಗೆ ವಯಸ್ಸಾಗಿಲ್ಲದಿರಬಹುದು, ಆದರೆ ನಮ್ಮ ಸಮುದಾಯಕ್ಕೆ ಪ್ರಚೋದನಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ವಿಷ ಬಿತ್ತುವುದು ತಪ್ಪು. ಮುಸ್ಲಿಂ ಸಮುದಾಯವನ್ನು ಇಂತಹ ಮಾತುಗಳ ಮೂಲಕ ದಾರಿ ತಪ್ಪಿಸಬಾರದು," ಎಂದು ಎಚ್ಚರಿಸಿದರು. "ಕಾಂಗ್ರೆಸ್ ಪಕ್ಷ ಕಳೆದ 70 ವರ್ಷಗಳಿಂದ ಮುಸ್ಲಿಂ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ. ಇದುವರೆಗೆ ಒಬ್ಬ ಮುಸ್ಲಿಂ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡುವ ಸೌಜನ್ಯ ತೋರಿಲ್ಲ. ಆದರೆ ಬಿಜೆಪಿ ಸರ್ಕಾರವು ಎ.ಪಿ.ಜೆ ಅಬ್ದುಲ್ ಕಲಾಂ ಅವರಂತಹ ಮಹಾನ್ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡುವ ಮೂಲಕ ಸಮುದಾಯಕ್ಕೆ ಗೌರವ ನೀಡಿದೆ," ಎಂದು ತಿಳಿಸಿದರು.

"ಆರ್‌ಎಸ್‌ಎಸ್ ಮತ್ತು ಬಿಜೆಪಿ ನಿಜವಾಗಿಯೂ ವಿಷಕಾರಿಯಾಗಿದ್ದರೆ ಅಬ್ದುಲ್ ಕಲಾಂ ಅಂತಹವರು ದೇಶದ ಅತ್ಯುನ್ನತ ಸ್ಥಾನಕ್ಕೇರಲು ಸಾಧ್ಯವಾಗುತ್ತಿರಲಿಲ್ಲ. ಖರ್ಗೆಯವರ ಹೇಳಿಕೆಗಳು ಕೇವಲ ರಾಜಕೀಯ ಪ್ರೇರಿತ ಮತ್ತು ಅಪಾಯಕಾರಿ."

— ಇಬ್ರಾಹಿಂ ದಿಗ್ಗಾಂವ್, ಅಧ್ಯಕ್ಷರು, ಬಿಜೆಪಿ ಅಲ್ಪಸಂಖ್ಯಾತ ಘಟಕ ಚಿತ್ತಾಪುರ.

ಗುರುವಾರ, ಏಪ್ರಿಲ್ 9, 2026

ರೈತರ ಅಭ್ಯುದಯಕ್ಕೆ ಕಾಂಗ್ರೆಸ್ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ.

ಚಿತ್ತಾಪುರ: ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDB) ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳಿಗೆ ತರಕಾರಿ ಬೀಜಗಳ ಕಿಟ್ ವಿತರಿಸಿ ಮಾತನಾಡಿದ ಅವರು
"ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರಿಗಾಗಿ ಒಟ್ಟು ₹2,590 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಇದರಲ್ಲಿ ₹656 ಕೋಟಿ ಬೆಳೆ ವಿಮೆಯೂ ಸೇರಿದೆ. ಇಷ್ಟೊಂದು ಬೃಹತ್ ಮೊತ್ತದ ಪರಿಹಾರ ಪಡೆದ ಜಿಲ್ಲೆ ರಾಜ್ಯದಲ್ಲೇ ಮತ್ತೊಂದಿಲ್ಲ," ಎಂದು ಸಚಿವರು ಹೆಮ್ಮೆಯಿಂದ ಹೇಳಿದರು. ಹಿಂದೆ ಜಿಲ್ಲೆಯಲ್ಲಿ ತೊಗರಿ ಬೆಳೆಗೆ ನೆಟೆ ರೋಗ ತಗುಲಿ 2 ಲಕ್ಷ ಹೆಕ್ಟೇರ್ ಹಾನಿಯಾದಾಗ ₹182 ಕೋಟಿ ಬಿಡುಗಡೆ ಮಾಡಲಾಗಿತ್ತು. ಆದರೆ, ಈ ಹಿಂದೆ ಬಿಜೆಪಿ ಸರ್ಕಾರ ಬರ ಮತ್ತು ನೆರೆಯ ಸಂದರ್ಭದಲ್ಲಿ ಜಿಲ್ಲೆಗೆ ಕೇವಲ ₹22 ಕೋಟಿ ನೀಡಿತ್ತು ಎಂದು ಅವರು ಹೋಲಿಕೆ ಮಾಡಿದರು.
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು, "ಕೇಂದ್ರ ಸರ್ಕಾರ ರೈತ ವಿರೋಧಿ ನಿಲುವು ತಳೆದು ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ತಡೆಹಿಡಿದಿತ್ತು. ಇದಕ್ಕಾಗಿ ರಾಜ್ಯ ಸಚಿವ ಸಂಪುಟವೇ ದೆಹಲಿಯಲ್ಲಿ ಪ್ರತಿಭಟನೆ ನಡೆಸಬೇಕಾಯಿತು. ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯವೊಂದು ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತು. ಸುಪ್ರೀಂ ಕೋರ್ಟ್ ಚೀಮಾರಿ ಹಾಕಿದ ನಂತರವಷ್ಟೇ ಕೇಂದ್ರ ಅನುದಾನ ಬಿಡುಗಡೆ ಮಾಡಿತು. ಇದು ನಮ್ಮ ರೈತಪರ ಬದ್ಧತೆಗೆ ಸಾಕ್ಷಿ," ಎಂದರು.

ರೈತರ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ ಕೋಲ್ಡ್ ಸ್ಟೋರೇಜ್‌ (ಶೀತಲೀಕರಣ ಘಟಕ) ನಿರ್ಮಾಣ ಮತ್ತು ಪಲ್ಸ್ ಪ್ರೋಟೀನ್ ಹಬ್‌ ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಸಚಿವರು ತಿಳಿಸಿದರು. ಈಗಾಗಲೇ ಡ್ರೋನ್ ಮೂಲಕ ಕೀಟನಾಶಕ ಸಿಂಪಡಿಸುವ ತಂತ್ರಜ್ಞಾನ ಪರಿಚಯಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸುಧಾರಿತ ಯಂತ್ರೋಪಕರಣಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಲಾಯಿತು. ಡಿಎಪಿ ಗೊಬ್ಬರದ ಬದಲಿಗೆ ಸಾವಯವ ಗೊಬ್ಬರ ಬಳಸುವ ಕುರಿತಾದ ಮಾಹಿತಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು.

ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು, ಎಂಎಲ್ಸಿ ಜಗದೇವ ಗುತ್ತೇದಾರ ಮಾತನಾಡಿ, ಪ್ರಿಯಾಂಕ್ ಖರ್ಗೆ ಬಂದ ಮೇಲೆ ಚಿತ್ತಾಪುರ ಹಾಗೂ ಕಲಬುರಗಿ ಚಿತ್ರಣವೇ ಬದಲಾಗಿದೆ, ಮಲ್ಲಿಕಾರ್ಜುನ ಖರ್ಗೆ 371ಜೆ ಕಲಂ ನೀಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ, ಅದೇ ರೀತಿ ಪ್ರಿಯಾಂಕ್ ಖರ್ಗೆ ತಂದೆಗೆ ತಕ್ಕ ಮಗನಾಗಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ವಿಧಾನಸಭಾ ಮತ್ತು ವಿಧಾನ ಪರಿಷತ್ ನಲ್ಲಿ ಹಾಗೂ ವಿರೋಧ ಪಕ್ಷಗಳಿಗೆ ತಕ್ಕ ಉತ್ತರ ನೀಡುವ ಏಕೈಕ ನಾಯಕ ಪ್ರಿಯಾಂಕ್ ಖರ್ಗೆ ಎಂದು ಬಣ್ಣಿಸಿದರು.

ತೊಗರಿ ಮಂಡಳಿ ಅಧ್ಯಕ್ಷ ಸೈಯದ್ ಮಹೆಮೂದ್ ಚಿಸ್ತಿ ಸಾಹೇಬ್, ಕೆಕೆಆರ್‌'ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಸಿಇಒ ಭಂವರ್ ಸಿಂಗ್ ಮೀನಾ, ಎಸ್ ಪಿ ಅತ್ತೂರು ಶ್ರೀನಿವಾಸಲು, ಕೃಷಿ ಜಂಟಿ ನಿರ್ದೇಶಕ ಸಮದ್ ಪಟೇಲ್, ಎಸಿ ಪ್ರಭು ರೆಡ್ಡಿ, ತಹಸೀಲ್ದಾ‌ರ್ ನಾಗಯ್ಯ ಹಿರೇಮಠ, ತಾಪಂ ಇಒ ಮಹ್ಮದ್ ಅಕ್ರಂ ಪಾಷಾ, ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ, ಕೃಷಿ ಅಧಿಕಾರಿ ಸಂಜೀವ್ ಮಾನಕರೆ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ಪಿಎಲ್ಲಿ ಬ್ಯಾಂಕ್‌ ಅಧ್ಯಕ್ಷ ಭೀಮಣ್ಣ ಸಾಲಿ, ಡಾ.ಮಹಾಂತಗೌಡ ಪಾಟೀಲ, ದೇವಿಂದ್ರ ಯಾಬಾಳ, ಸಂಜಯ್ ಬುಳಕರ್‌ ಸೇರಿದಂತೆ ಇತರರು ಇದ್ದರು.ಜಿಲ್ಲಾ ತೋಟಗಾರಿಕೆ ಜಂಟಿ ನಿರ್ದೇಶಕರಾದ ಸಂತೋಷ ಇನಾಮದಾರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು, ತೋಟಗಾರಿಕೆ ಇಲಾಖೆ ಹಿರಿಯ ನಿರ್ದೇಶಕರಾದ ರಾಜಕುಮಾ‌ರ್ ಗೋವಿನ್ ವಂದಿಸಿದರು.

ಏ. 11ಕ್ಕೆ ಸೂಗೂರ (ಎನ್) ಗ್ರಾಮಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಜುಮ್ಮಣ್ಣ ಪೂಜಾರಿ ಕರೆ

ಚಿತ್ತಾಪುರ: ತಾಲೂಕಿನ ಸೂಗೂರ (ಎನ್) ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಭೋಜಲಿಂಗೇಶ್ವರ ದೇವಸ್ಥಾನದ ಲೋಕಾರ್ಪಣೆ, ಮೂರ್ತಿ ಪ್ರತಿಷ್ಠಾಪನೆ, ಬೆಳ್ಳಿ ರಥೋತ್ಸವ ಹಾಗೂ ಕಲ್ಯಾಣ ಮಂಟಪದ ಉದ್ಘಾಟನಾ ಸಮಾರಂಭವು ಏಪ್ರಿಲ್ 11ರಂದು ಅದ್ದೂರಿಯಾಗಿ ಜರುಗಲಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕುರುಬ ಸಮಾಜದ ಹಿರಿಯ ಮುಖಂಡ ಜುಮ್ಮಣ್ಣ ಪೂಜಾರಿ ಅವರು ಮನವಿ ಮಾಡಿದರು.

ಗುರುವಾರ ಪಟ್ಟಣದ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಶ್ರೀ ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠವು ಸರ್ವ ಜನಾಂಗದವರ ಆರಾಧ್ಯ ಕೇಂದ್ರವಾಗಿದೆ. ಈ ಭಾಗದ ಸಾವಿರಾರು ಭಕ್ತರ ಶ್ರದ್ಧಾ ಕೇಂದ್ರವಾಗಿರುವ ಈ ಮಠದ ನೂತನ ದೇವಸ್ಥಾನದ ಲೋಕಾರ್ಪಣೆ ಸಮಾರಂಭವು ಅತ್ಯಂತ ಸಂಭ್ರಮದಿಂದ ನಡೆಯಲಿದೆ" ಎಂದು ತಿಳಿಸಿದರು.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾದ ಭೀಮಣ್ಣ ಸಾಲಿ ಮಾತನಾಡಿ, "ಸ್ಥಳೀಯ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿಶೇಷ ಆಸಕ್ತಿ ಮತ್ತು ನೇತೃತ್ವದಲ್ಲಿ ಈ ಬೃಹತ್ ಕಾರ್ಯಕ್ರಮ ಸಂಘಟಿತವಾಗಿದೆ. ರಾಜ್ಯದ ಮುಖ್ಯಮಂತ್ರಿಗಳು ಆಗಮಿಸುತ್ತಿರುವುದು ಇಡೀ ತಾಲೂಕಿಗೆ ಹೆಮ್ಮೆಯ ವಿಷಯ. ಹೀಗಾಗಿ ಸಾರ್ವಜನಿಕರು ಮತ್ತು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು" ಎಂದು ಕೋರಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ಅಲ್ಪಸಂಖ್ಯಾತರ ಅಧ್ಯಕ್ಷ ಮುಕ್ತಾರ್ ಪಟೇಲ್, ಪುರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ ಕಾಶಿ, ಪಿಕೆಪಿಎಸ್ ಅಧ್ಯಕ್ಷ ಬಸವರಾಜ ಪೂಜಾರಿ, ಮುಖಂಡರಾದ ಶಿವರಾಜ್ ಕಲಗುರ್ತಿ, ಮನ್ಸೂರ್ ಪಟೇಲ್, ರಸೂಲ್ ಮುಸ್ತಫಾ, ಈರಪ್ಪ ಭೋವಿ, ಶಿವುಕುಮಾರ ಸುಲ್ತಾನಪೂರ, ಮಲ್ಲಿಕಾರ್ಜುನ ಬೆಣ್ಣೂರಕರ್, ಮಲ್ಲಿಕಾರ್ಜುನ ಹಣಿಕೇರಿ, ಶಿವಯೋಗಿ ಸಾಹು ಗುಂಡಗುರ್ತಿ, ಭೋಜು ಶೇರಿ, ಸಂಜಯ್ ಬುಳಕ‌ರ್, ಪ್ರದೀಪ್ ಕದ್ದರಗಿ, ದೇವು ನಾಲವಾರ, ಬೀರು ಪೂಜಾರಿ, ನಿಂಗು ಕಡಬೂರ, ನಾಗು ಗಂಗಾಣಿ, ಸೇರಿದಂತೆ ಇತರರು ಇದ್ದರು. ಉದಯಕುಮಾ‌ರ್ ಸಾಗರ ಸ್ವಾಗತಿಸಿದರು, ಸಂತೋಷ ಪೂಜಾರಿ ನಿರೂಪಿಸಿದರು.

ಬುಧವಾರ, ಏಪ್ರಿಲ್ 8, 2026

ತರಕಾರಿ ಬೀಜಗಳ ಕಿಟ್ ವಿತರಣಾ ಕಾರ್ಯಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ.

ಚಿತ್ತಾಪುರ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಹಾಗೂ ತೋಟಗಾರಿಕೆ ಇಲಾಖೆ ಕಲಬುರ್ಗಿ ಇವರ ಸಂಯುಕ್ತ ಆಶ್ರಯದಲ್ಲಿ ಏಪ್ರಿಲ್ 9ರಂದು ಮಧ್ಯಾಹ್ನ 1 ಗಂಟೆಗೆ ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ "ತರಕಾರಿ ಬೀಜಗಳ ಕಿಟ್ ವಿತರಣಾ ಕಾರ್ಯಕ್ರಮ"ವನ್ನು ಆಯೋಜಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ನಿರ್ದೇಶಕರಾದ ರಾಜಕುಮಾರ್ ಗೋವಿನ್ ಅವರು ತಿಳಿಸಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಎಂ. ಖರ್ಗೆ ಅವರು ವಹಿಸಲಿದ್ದಾರೆ. ಜೂತೆಗೆ  ವೈದ್ಯಕೀಯ ಶಿಕ್ಷಣ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು.ಡಾ. ಶರಣಪ್ರಕಾಶ್ ಪಾಟೀಲ್,  ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಕೆಕೆಆರ್ಡಿಬಿ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕರು.ಡಾ. ಅಜಯಸಿಂಗ್,ಆಳಂದ್ ಶಾಸಕರಾದ ಬಿ.ಆರ್. ಪಾಟೀಲ್,  ಕಲಬುರ್ಗಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಖನೀಜಾ ಫಾತಿಮಾ, ಇವರೊಂದಿಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ತೋಟಗಾರಿಕೆ ಜಂಟಿ ನಿರ್ದೇಶಕರಾದ ಸಂತೋಷ್ ಇನಾಮದಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರ್ ಶ್ರೀನಿವಾಸಲು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ವಿಶೇಷ ಆಹ್ವಾನಿತರು ಭಾಗವಹಿಸಲಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಹಿರಿಯ ನಿರ್ದೇಶಕ ರಾಜಕುಮಾರ್ ಗೋವಿನ್ ಅವರು, "ಸ್ಥಳೀಯವಾಗಿ ತರಕಾರಿ ಉತ್ಪಾದನೆಯನ್ನು ಉತ್ತೇಜಿಸಲು ಮತ್ತು ರೈತರಿಗೆ ನೆರವಾಗಲು ಈ ಕಿಟ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಾಲೂಕಿನ ರೈತರು, ಸಾರ್ವಜನಿಕರು ಹಾಗೂ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು," ಎಂದು ವಿನಂತಿಸಿದ್ದಾರೆ.

ಮಂಗಳವಾರ, ಏಪ್ರಿಲ್ 7, 2026

ಅರಿವಿನ ಗವಿಯಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹ: ಸಿಎಂಗೆ ಮನವಿ.

ಚಿತ್ತಾಪುರ: ಬೀದರ್ ಜಿಲ್ಲೆಯ ಬಸವಕಲ್ಯಾಣದ ತ್ರಿಪುರಾಂತಕ ಕೆರೆ ಬಳಿಯಿರುವ ಹನ್ನೆರಡನೇ ಶತಮಾನದ ಶಿವಶರಣ ಹಡಪದ ಅಪ್ಪಣ್ಣನವರ ಅರಿವಿನ ಗವಿಯಲ್ಲಿ ಅಕ್ರಮವಾಗಿ ಬೇರೆ ಮೂರ್ತಿ ಪ್ರತಿಷ್ಠಾಪಿಸಿರುವುದನ್ನು ಖಂಡಿಸಿ, ಅಲ್ಲಿ ಪುನಃ ಅಪ್ಪಣ್ಣನವರ ಮೂರ್ತಿಯನ್ನೇ ಪ್ರತಿಷ್ಠಾಪಿಸಬೇಕೆಂದು ಒತ್ತಾಯಿಸಿ ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ತಹಸೀಲ್ದಾರ್ ನಾಗಯ್ಯ ಹಿರೇಮಠ್ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ರವಾನಿಸಿದ ಸಂಘಟನೆಯು, ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿದ್ದ ಹಡಪದ ಅಪ್ಪಣ್ಣನವರ ಐತಿಹಾಸಿಕ ಅರಿವಿನ ಗವಿಗೆ ಧಕ್ಕೆಯಾಗಿರುವುದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿತು.

ಬಸವಕಲ್ಯಾಣದ ಅನುಭವ ಮಂಟಪದ ತ್ರಿಪುರಾಂತಕ ಕೆರೆ ಸಮೀಪ ಅನೇಕ ಬಸವಾದಿ ಶರಣರ ಅರಿವಿನ ಗವಿಗಳಿವೆ. ಇವುಗಳಲ್ಲಿ ಹಡಪದ ಅಪ್ಪಣ್ಣನವರ ಗವಿಯೂ ಒಂದು. ಆದರೆ, ಬಸವೇಶ್ವರ ದೇವಸ್ಥಾನದ ಪಂಚ ಕಮಿಟಿಯವರು ಈ ಗವಿಯನ್ನು ಅಕ್ರಮವಾಗಿ ಹಸ್ತಕ್ಷೇಪ ಮಾಡಿ, ಅಲ್ಲಿ ಅನ್ಯ ಶರಣರ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಾರೆ ಎಂದು ಸಮಾಜದ ಮುಖಂಡರು ಆರೋಪಿಸಿದ್ದಾರೆ. ಇದರಿಂದ ಹಡಪದ ಅಪ್ಪಣ್ಣನವರ ಇತಿಹಾಸದ ಮೌಲ್ಯಕ್ಕೆ ಧಕ್ಕೆಯಾಗಿದ್ದು, ಸಮುದಾಯದ ಭಕ್ತರ ಭಾವನೆಗಳಿಗೆ ತೀವ್ರ ಅನ್ಯಾಯವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಅಕ್ರಮವಾಗಿ ಮೂರ್ತಿ ಬದಲಿಸಿದ ಪಂಚ ಕಮಿಟಿ ಮತ್ತು ಅದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಗವಿಯನ್ನು ಮೊದಲಿನ ಸ್ಥಿತಿಗೆ ತಂದು, ಅಲ್ಲಿ ಹಡಪದ ಅಪ್ಪಣ್ಣನವರ ಮೂರ್ತಿಯನ್ನೇ ಮರು ಪ್ರತಿಷ್ಠಾಪಿಸಬೇಕು. ಸದರಿ ಅರಿವಿನ ಗವಿಯನ್ನು ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರಕ್ಕೆ ಒಪ್ಪಿಸಿ, ಸರ್ಕಾರವೇ ಅದರ ಸಮರ್ಪಕ ಅಭಿವೃದ್ಧಿಗೆ ಕ್ರಮ ವಹಿಸಬೇಕು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಾಧ್ಯಕ್ಷ ರಮೇಶ್ ಕೂಲ್ಲೂರ, "ನಮ್ಮ ಶರಣರ ಇತಿಹಾಸ ಮತ್ತು ಅರಿವಿನ ಗವಿಯನ್ನು ಕಳೆದುಕೊಳ್ಳುವ ಪ್ರಶ್ನೆಯೇ ಇಲ್ಲ. ಈಗಾಗಲೇ ಅನೇಕ ಮಠಾಧೀಶರು ಹಾಗೂ ಸಮಾಜದ ನಾಯಕರು ಹೋರಾಟ ನಡೆಸಿದ್ದರೂ ಇನ್ನೂ ನ್ಯಾಯ ಸಿಕ್ಕಿಲ್ಲ. ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ನಮಗೆ ನ್ಯಾಯ ಒದಗಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು," ಎಂದು ಎಚ್ಚರಿಸಿದರು.

ಮನವಿ ಸಲ್ಲಿಕೆಯ ಸಂದರ್ಭದಲ್ಲಿ ಉಪಾಧ್ಯಕ್ಷ ಶೇಷಣ್ಣ ದಂಡಗುಂಡ, ನಗರ ಅಧ್ಯಕ್ಷ ಮುರಳಿಕುಮಾರ ಸಾತನೂರ, ಸಿದ್ದು ಗುಂಡಗುರ್ತಿ, ಚೇತನ್ ಚಿತ್ತಾಪುರ, ಭೀಮಾಶಂಕರ,ಹಣಮಂತರಾಯ ಮುಗಟಾ, ಸಮಾಜದ ಮುಖಂಡರು, ಭಕ್ತರು ಹಾಗೂ ಹಡಪದ ಅಪ್ಪಣ್ಣ ಸಮಾಜದ ಕಾರ್ಯಕರ್ತರು ಉಪಸ್ಥಿತರಿದ್ದರು.

ಮಕ್ಕಳೇ ಶಾಲೆಯ ಆಸ್ತಿ: ಆರಾಧನಾ ಶಾಲೆಯ ಸಂಭ್ರಮದ ವಾರ್ಷಿಕೋತ್ಸವ

ಚಿತ್ತಾಪುರ: ಪಟ್ಟಣದ ಆರಾಧನಾ ಪೂರ್ವ ಪ್ರಾಥಮಿಕ ಶಾಲೆಯ 7ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನವು ಮಂಗಳವಾರ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಜರುಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುರಸಭೆ ಮಾಜಿ ಅಧ್ಯಕ್ಷೆ ಶ್ರೀಮತಿ ಅನ್ನಪೂರ್ಣ ಎನ್. ಕಲ್ಲಕ್ ಅವರು, "ಮಕ್ಕಳ ಬಾಲ್ಯದ ಶಿಕ್ಷಣವು ಅವರ ಭವಿಷ್ಯದ ಅಡಿಪಾಯವಾಗಿದೆ. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿನ ಪ್ರತಿಭೆಯನ್ನು ಹೊರಹಾಕಲು ಉತ್ತಮ ವೇದಿಕೆಯಾಗುತ್ತವೆ," ಎಂದು ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಿ.ಆರ್.ಪಿ. ತಮ್ಮನ್ನ ಮಾತನಾಡಿ, "ಆರಾಧನಾ ಶಾಲೆಯ ಶಿಕ್ಷಕರು ಪ್ರತಿಯೊಂದು ಮಗುವನ್ನು ತಮ್ಮ ಸ್ವಂತ ಮಗುವಿನಂತೆ ಪ್ರೀತಿಸುತ್ತಾರೆ. ಮಕ್ಕಳ ಬುದ್ಧಿಮಟ್ಟವನ್ನು ಅರಿತು, ಅದಕ್ಕೆ ಅನುಗುಣವಾಗಿ ಪಾಠ ಮಾಡುವುದು ಇಲ್ಲಿನ ವಿಶೇಷ. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಈ ಶಾಲೆ ಹೆಚ್ಚಿನ ಒತ್ತು ನೀಡುತ್ತಿರುವುದು ಶ್ಲಾಘನೀಯ," ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಗುರುಗಳಾದ ಶ್ರೀಮತಿ ನಮಿತಾ ಗೋಪಸೇನ್ ಅವರು ಮಾತನಾಡಿ, "2019ರಲ್ಲಿ ಕೇವಲ 17 ಮಕ್ಕಳೊಂದಿಗೆ ಆರಂಭವಾದ ನಮ್ಮ ಸಂಸ್ಥೆಯಲ್ಲಿ ಇಂದು ನೂರಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಯ ಈ ಯಶಸ್ಸಿಗೆ ಪೋಷಕರ ನಿರಂತರ ಬೆಂಬಲ ಮತ್ತು ಪ್ರೋತ್ಸಾಹವೇ ಕಾರಣ," ಎಂದು ನೆನಪಿಸಿಕೊಂಡರು.

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ, ಶಾಲೆಯ ಅಭಿವೃದ್ಧಿಗೆ ಮತ್ತು ಮಕ್ಕಳ ಕಲಿಕೆಗೆ ಬೆಂಬಲ ನೀಡುತ್ತಿರುವ 100 ಜನ ಪೋಷಕರನ್ನು ಶಾಲೆಯ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು. ಪ್ರತಿಯೊಬ್ಬ ಪೋಷಕರಿಗೆ ಗೌರವದ ಸಂಕೇತವಾಗಿ ಒಂದು 'ದಾಸವಾಳ ಗಿಡ'ವನ್ನು ನೀಡಿ, ಮನೆಯಲ್ಲಿ ಪರಿಸರವನ್ನು ಬೆಳೆಸುವಂತೆ ಪ್ರೇರೇಪಿಸಲಾಯಿತು. ಇದು ಪೋಷಕರು ಮತ್ತು ಶಾಲೆಯ ನಡುವಿನ ಬಾಂಧವ್ಯವನ್ನು ಎತ್ತಿ ತೋರಿಸಿತು.

ಇದೇ ಸಂದರ್ಭದಲ್ಲಿ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿಗಳಾದ ಮರಿಯಪ್ಪ ಬೊಮ್ಮನಹಳ್ಳಿಕರ್ ಅವರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.

ಕಾರ್ಯಕ್ರಮದಲ್ಲಿ ರಕ್ಷಿತಾ ಸಿಂಪಿ ಸ್ವಾಗತಿಸಿದರು, ರಕ್ಷಿತಾ ಹುಳಗೋಳಕ  ಕಾರ್ಯಕ್ರಮ ನಿರೂಪಿಸಿದರು ಮತ್ತು ನಸರ ವಂದನಾರ್ಪಣೆ ಮಾಡಿದರು. ಶಾಲಾ ಮಕ್ಕಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಪೋಷಕರ ಕಣ್ಮನ ಸೆಳೆದವು.

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಟೀಕೆ: ಮಣಿಕಂಠ ರಾಠೋಡ್ ನಡೆಗೆ ಜಗದೀಶ ಚವ್ಹಾಣ ತೀವ್ರ ಆಕ್ರೋಶ

ಚಿತ್ತಾಪುರ: ಸಮಾಜ ಸೇವೆಯ ಹೆಸರಿನಲ್ಲಿ ಮೋಜು-ಮಸ್ತಿ ಮಾಡುತ್ತಾ, ಸಮುದಾಯಗಳ ನಡುವೆ ದ್ವೇಷ ಬಿತ್ತುವ ಕೆಲಸ ಮಾಡುತ್ತಿರುವ ಮಣಿಕಂಠ ರಾಠೋಡ್ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಟೀಕಿಸುವ ಯಾವುದೇ ನೈತಿಕತೆ ಇಲ್ಲ ಎಂದು ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಯುವ ಮುಖಂಡ ಜಗದೀಶ ಚವ್ಹಾಣ ಕಿಡಿಕಾರಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಣಿಕಂಠ ರಾಠೋಡ್ ಅವರ ನಡೆಯನ್ನು ಕಟುವಾಗಿ ಟೀಕಿಸಿ ಮಾತನಾಡಿದ ಅವರು  ಚುನಾವಣೆಯ ಮುಂಚೆ ಚಿತ್ತಾಪುರದಲ್ಲಿ ಅನೇಕ ಮಂದಿರಗಳನ್ನು ಕಟ್ಟಿಸಿಕೊಡುತ್ತೇನೆ ಎಂದು ನಂಬಿಸಿದ ಮಣಿಕಂಠ, ಇದ್ದ ಮಂದಿರಗಳನ್ನೇ ಬೀಳಿಸಿ ಇಂದಿಗೂ ಅವು ಹಾಳಾಗಿ ಬಿದ್ದಿರುವಂತೆ ಮಾಡಿದ್ದಾರೆ. ಇವರ ಮಾತನ್ನು ನಂಬಿ ದೇವಸ್ಥಾನದ ಪೂಜಾರಿಗಳು ಹಾಗೂ ಭಕ್ತರು ಇಂದು ಮೋಸ ಹೋಗಿದ್ದಾರೆ.

ಕನಿಷ್ಠ ಒಬ್ಬ ಗ್ರಾಮ ಪಂಚಾಯತಿ ಸದಸ್ಯನನ್ನು ಸೋಲಿಸುವ ಯೋಗ್ಯತೆ ಇಲ್ಲದ ಇವರು ಪ್ರಧಾನಿಯಾಗುವ ಮಾತುಗಳನ್ನಾಡುತ್ತಿದ್ದಾರೆ. ಸಂವಿಧಾನದ ಅರಿವಾಗಲಿ ಅಥವಾ ಮೀಸಲಾತಿಯ ಬಗ್ಗೆ ಗೌರವವಾಗಲಿ ಇವರಿಗಿಲ್ಲ. ಯಾವ ಮೀಸಲಾತಿಯಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದ್ದರೋ, ಅದೇ ಮೀಸಲಾತಿಯನ್ನು ರದ್ದುಪಡಿಸುತ್ತೇನೆ ಎಂದು ಹೇಳುವುದು ಇವರ ಅಜ್ಞಾನಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲೇ ಇವರ ನಡವಳಿಕೆಯಿಂದಾಗಿ ಇವರನ್ನು 'ತಡಿಪಾರ್' ಮಾಡಲಾಗಿತ್ತು. ಇಂತಹ ವ್ಯಕ್ತಿ ಇಂದು ಪ್ರಬುದ್ಧ ರಾಜಕಾರಣಿ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ.

ಸಚಿವ ಪ್ರಿಯಾಂಕ್ ಖರ್ಗೆ ಅವರು ಜ್ಞಾನ ಭಂಡಾರವುಳ್ಳ, ಸಂವಿಧಾನವನ್ನು ಅರಿತ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕರು. ರಾಜ್ಯದ ಮೂರು ಪ್ರಮುಖ ಖಾತೆಗಳನ್ನು ನಿಭಾಯಿಸುತ್ತಿರುವ ಅವರ ಜೊತೆ ಚಿತ್ತಾಪುರ ಮತ್ತು ಕಲಬುರಗಿಯ ಸಮಸ್ತ ಪ್ರಜ್ಞಾವಂತ ಮತದಾರರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸದಾ ಇರುತ್ತಾರೆ ಎಂದು ಜಗದೀಶ ಚವ್ಹಾಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಣಿಜ್ಯ ಸಿಲಿಂಡರ್, ಔಷಧ ಬೆಲೆ ಏರಿಕೆ: ಎಸ್‌ಯುಸಿಐ (ಸಿ) ತೀವ್ರ ವಿರೋಧ

ವಾಡಿ: ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಯ ಅಡುಗೆ ಅನಿಲ ಹಾಗೂ ಜೀವ ರಕ್ಷಕ ಔಷಧಿಗಳ ಬೆಲೆಯನ್ನು ಸತತವಾಗಿ ಏರಿಕೆ ಮಾಡುತ್ತಿರುವುದನ್ನು ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ವಾಡಿ ಸಮಿತಿ ತೀವ್ರವಾಗಿ ಖಂಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪಕ್ಷದ ಸ್ಥಳೀಯ ಕಾರ್ಯದರ್ಶಿ ಶರಣು ಹೇರೂರ್, ಕೇಂದ್ರದ ಬಿಜೆಪಿ ಸರ್ಕಾರವು ಸಾಮಾನ್ಯ ಜನರನ್ನು ಬೆಲೆ ಏರಿಕೆಯ ಸುಳಿಯಿಂದ ರಕ್ಷಿಸುವ ಬದಲು ಕಾರ್ಪೊರೇಟ್ ಹಿತಾಸಕ್ತಿಗೆ ಪೂರಕವಾಗಿ ನಡೆದುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಇತ್ತೀಚಿನ ನಿರ್ಧಾರಗಳಿಂದ ಜನ ಸಾಮಾನ್ಯರ ಮೇಲೆ ಬಿದ್ದಿರುವ ಹೊರೆಗಳಾದ ಕೇವಲ 25 ದಿನಗಳ ಅಂತರದಲ್ಲಿ 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 218 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಏಪ್ರಿಲ್ 1 ರಿಂದ ಇದರ ಮಾರುಕಟ್ಟೆ ಬೆಲೆ 2208 ರೂಪಾಯಿ ಆಗಿದೆ.

ಕಳೆದ ತಿಂಗಳಷ್ಟೇ ಗೃಹಬಳಕೆಯ ಎಲ್‌ಪಿಜಿ ಬೆಲೆಯನ್ನು 60 ರೂ. ಹಾಗೂ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 114.50 ರೂ. ಹೆಚ್ಚಿಸಲಾಗಿತ್ತು. ಸುಮಾರು 700 ರಿಂದ 900 ಅಗತ್ಯ ಔಷಧಿಗಳ ಬೆಲೆಯನ್ನು ಏರಿಕೆ ಮಾಡಿರುವುದು ರೋಗಿಗಳು ಮತ್ತು ಬಡ ಕುಟುಂಬಗಳಿಗೆ ಮರಣ ಶಾಸನವಾದಂತಿದೆ.

"ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಈಗಾಗಲೇ ತತ್ತರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅಡುಗೆ ಅನಿಲ ಮತ್ತು ಔಷಧಗಳ ಬೆಲೆ ಏರಿಸಿರುವುದು ಬಿಜೆಪಿ ಸರ್ಕಾರದ ಜನವಿರೋಧಿ ನೀತಿಯನ್ನು ಎತ್ತಿ ತೋರಿಸುತ್ತದೆ."

— ಶರಣು ಹೇರೂರ್, ಸ್ಥಳೀಯ ಕಾರ್ಯದರ್ಶಿ, SUCI(C)

ಈ ಕೂಡಲೇ ಏರಿಸಲಾದ ಬೆಲೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿರುವ ಅವರು, ಸರ್ಕಾರದ ಈ ಜನವಿರೋಧಿ ಧೋರಣೆಯ ವಿರುದ್ಧ ಸಾರ್ವಜನಿಕರು ಸಂಘಟಿತರಾಗಿ ಧ್ವನಿ ಎತ್ತಬೇಕು ಮತ್ತು ಪ್ರತಿಭಟನೆಯ ಹಾದಿ ಹಿಡಿಯಬೇಕು ಎಂದು ಕರೆ ನೀಡಿದ್ದಾರೆ.

ಪ್ರಿಯಾಂಕ್ ಖರ್ಗೆ ಸೋಲಿಸುವುದೇ ನನ್ನ ಅಜೆಂಡಾ: ಮಣಿಕಂಠ.

ಚಿತ್ತಾಪುರ: ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ನನಗೆ ಟಿಕೆಟ್ ನೀಡುವ ಸಂಪೂರ್ಣ ಭರವಸೆ ಇದೆ. ಒಂದು ವೇಳೆ ಪಕ್ಷ ಬೇರೆಯವರಿಗೆ ಟಿಕೆಟ್ ನೀಡಿದರೂ ಸಹ, ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಆದರೆ, ಈ ಬಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸೋಲಿಸುವುದೇ ನನ್ನ ಏಕೈಕ ಗುರಿಯಾಗಿದೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ ಘೋಷಿಸಿದರು.

ಪಟ್ಟಣದ ಲಾಡ್ಡಿಂಗ್ ಕ್ರಾಸ್ ಬಳಿ ರಾತ್ರಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ತಮ್ಮ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸಿ ಮಾತನಾಡಿದ ಅವರು ಕಳೆದ ಚುನಾವಣೆಯಲ್ಲಿ 26 ವರ್ಷದ ಸಣ್ಣ ವಯಸ್ಸಿನಲ್ಲೇ ಬಿಜೆಪಿ ನನಗೆ ಟಿಕೆಟ್ ನೀಡಿ ಆಶೀರ್ವದಿಸಿತ್ತು. ಚಿತ್ತಾಪುರ ಇತಿಹಾಸದಲ್ಲೇ ಬಿಜೆಪಿಗೆ ಅತಿ ಹೆಚ್ಚು ಅಂದರೆ 67,683 ಮತಗಳು ಲಭಿಸಿವೆ. ನಮ್ಮ ಕುಟುಂಬದಲ್ಲಿ ಯಾರೊಬ್ಬರೂ ಗ್ರಾಪಂ ಸದಸ್ಯರೂ ಆಗಿಲ್ಲದ ಕಾರಣ, ರಾಜಕೀಯ ಅನುಭವದ ಕೊರತೆ ಹಾಗೂ ಪ್ರಿಯಾಂಕ್ ಖರ್ಗೆ ಅವರ ಷಡ್ಯಂತ್ರದಿಂದಾಗಿ ಅಲ್ಪ ಮತಗಳ ಅಂತರದಿಂದ ಸೋಲಬೇಕಾಯಿತು. ಗಡ್ಡ ಬಿಟ್ಟುಕೊಂಡು ಕುಟುಂಬದ ಹೆಸರಿನಲ್ಲಿ ಅವರು ರಾಜಕೀಯ ನಾಟಕವಾಡಿದರು ಎಂದು ಟೀಕಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರ ಹಗರಣಗಳನ್ನು ಬಯಲಿಗೆ ತರುವುದು ಹಾಗೂ ಕ್ಷೇತ್ರದಲ್ಲಿ ಅವರ ಬೆಂಬಲಿಗರ ದಾದಾಗಿರಿ ಮತ್ತು ಗುಂಡಾಗಿರಿಯನ್ನು ಮಟ್ಟಹಾಕುವುದೇ ನನ್ನ ಪ್ರಮುಖ ಉದ್ದೇಶವಾಗಿದೆ. ಸುಳ್ಳು ಕೇಸುಗಳನ್ನು ಹಾಕಿ ನನ್ನನ್ನು 2024ರ ಡಿಸೆಂಬರ್‌ನಲ್ಲಿ ಗಡಿಪಾರು ಮಾಡಿಸಲಾಯಿತು. ಇದರಿಂದ ಕ್ಷೇತ್ರಕ್ಕೆ ಬರಲು ಅಡ್ಡಿಯಾಯಿತು. ಆದರೆ ಚಿತ್ತಾಪುರದ ಜನತೆ ನೀಡಿದ ಶಕ್ತಿಯಿಂದ ನಾನು ಮತ್ತೆ ಎದ್ದು ನಿಂತಿದ್ದೇನೆ.ಎಂದರು.

"ಇತ್ತೀಚೆಗೆ ತಂದೆ-ಮಗ (ಖರ್ಗೆ ಕುಟುಂಬ) ಕ್ಷೇತ್ರದಲ್ಲಿ ಕಾರ್ಯಕ್ರಮ ಮಾಡಿದರೂ ಹಣ ಕೊಟ್ಟು ಜನರನ್ನು ಕರೆಯಿಸುವ ಪರಿಸ್ಥಿತಿ ಬಂದಿದೆ. ಆದರೆ ನಾನು ಹೋದ ಕಡೆಯಲ್ಲೆಲ್ಲ ಜನ ಸ್ವಯಂಪ್ರೇರಿತರಾಗಿ ಡೊಳ್ಳು, ಬಾಜಾ-ಭಜಂತ್ರಿಯೊಂದಿಗೆ ಅದ್ಧೂರಿಯಾಗಿ ಸ್ವಾಗತಿಸುತ್ತಿದ್ದಾರೆ. ಕ್ಷೇತ್ರದ ಜನರು ನನ್ನನ್ನು ಮಗನಂತೆ ಕಾಣುತ್ತಿದ್ದಾರೆ," ಎಂದು ಭಾವುಕರಾದರು.

ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಬೇರೆ ಆಕಾಂಕ್ಷಿಗಳು ಬಂದರೆ ಪಕ್ಷ ಬಲಿಷ್ಠವಾಗುತ್ತದೆ ಹೊರತು ಅದಕ್ಕೆ ಯಾರೂ ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ಅವರು ಕಾರ್ಯಕರ್ತರಿಗೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅಶ್ವಥ್ ರಾಠೋಡ, ಶ್ರೀಕಾಂತ್ ಸುಲೇಗಾಂವ, ಜಿ.ಎಸ್.ಹಿರೇಮಠ, ಶಂಭುಲಿಂಗ ವಿಶ್ವಕರ್ಮ, ಸುನೀಲ್ ಚವ್ಹಾಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಭಾನುವಾರ, ಏಪ್ರಿಲ್ 5, 2026

ಸಮಾಜಮುಖಿ ಕಾರ್ಯಗಳಿಂದ ಜನ್ಮದಿನಕ್ಕೆ ಸಾರ್ಥಕತೆ: ಕಂಬಳೇಶ್ವರ ಶ್ರೀ.

ಚಿತ್ತಾಪುರ: ಜನ್ಮದಿನೋತ್ಸವವು ಕೇವಲ ಆಚರಣೆಯಾಗದೆ, ಬಡವರು, ದೀನದಲಿತರಿಗೆ ಹಾಗೂ ಸಮಾಜಕ್ಕೆ ಅನುಕೂಲವಾದಾಗ ಮಾತ್ರ ಅದಕ್ಕೊಂದು ಅರ್ಥ ಬರಲಿದೆ ಎಂದು ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ತಿಳಿಸಿದರು.

ಪಟ್ಟಣದ ಕಂಬಳೇಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ತಮ್ಮ 59ನೇ ಜನ್ಮ ದಿನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು ಜನ್ಮದಿನದ ಅಂಗವಾಗಿ ಭಕ್ತರು ಉಚಿತ ಕಣ್ಣಿನ ತಪಾಸಣೆ ಹಾಗೂ ಕನ್ನಡಕ ವಿತರಣಾ ಶಿಬಿರ ಹಮ್ಮಿಕೊಂಡಿರುವುದು ಶ್ಲಾಘನೀಯ. ಸಂಪತ್ತನ್ನು ಸತ್ಕಾರ್ಯಕ್ಕೆ ಬಳಸಿದಾಗ ಮಾತ್ರ ನಿಜವಾದ ತುಲಾಭಾರಕ್ಕೆ ಬೆಲೆ ಬರುತ್ತದೆ ಎಂದು ಶ್ರೀಗಳು ಅಭಿಪ್ರಾಯಪಟ್ಟರು.

ಹಾನಗಲ್ಲ ಕುಮಾರೇಶ್ವರರ ವಾಣಿಯಂತೆ, ಭಕ್ತರ ದೇಣಿಗೆ ಹಾಗೂ ಸರ್ಕಾರದ ಅನುದಾನದ ಸದ್ಬಳಕೆ ಮಾಡಿಕೊಂಡು ಶಿಥಿಲವಾಗಿದ್ದ ಮಠವನ್ನು ಇಂದು ಮಾದರಿಯಾಗಿ ಕಟ್ಟಲಾಗಿದೆ ಎಂದು ಸ್ಮರಿಸಿದರು.
ದಿಗಾಂವದ ಶ್ರೀ ಸಿದ್ದವೀರ ಶಿವಾಚಾರ್ಯರು ಮಾತನಾಡಿ, ಸೋಮಶೇಖರ ಶ್ರೀಗಳು ಕಲ್ಯಾಣ ಕರ್ನಾಟಕದ ಅತ್ಯುತ್ತಮ ವಾಗ್ಮಿಗಳು ಎಂದು ಬಣ್ಣಿಸಿದರು. ಸೇಡಂನ ಶ್ರೀ ಶಿವಶಂಕರ ಶಿವಾಚಾರ್ಯರು ಸೇರಿದಂತೆ ಹಲವು ಮಠಾಧೀಶರು ಶ್ರೀಗಳ ಜನಪರ ಕಾರ್ಯಗಳನ್ನು ಕೊಂಡಾಡಿದರು.

ಇದೇ ಸಂದರ್ಭದಲ್ಲಿ ಗೌರವ ಡಾಕ್ಟರೇಟ್ ಪದವಿ ಪಡೆದ ಮಾಲಗತ್ತಿಯ ಶ್ರೀ ಚನ್ನಬಸವ ಶರಣರು ಹಾಗೂ ಶಿವಶರಣಯ್ಯ ಪುರದಯ್ಯನಮಠ ಅವರನ್ನು ಸನ್ಮಾನಿಸಲಾಯಿತು.

 ಕಾರ್ಯಕ್ರಮದಲ್ಲಿ ನದಿಶಿನ್ನೂರು ಶ್ರೀ ಗುರುರಾಜೇಂದ್ರ ಮಹಾಶಿವಯೋಗಿಗಳು, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ನಾಗರೆಡ್ಡಿ ಗೋಪಸೇನ್, ನಾಗರಾಜ ರೇಷ್ಮೆ ಸೇರಿದಂತೆ ನೂರಾರು ಭಕ್ತರು ಹಾಗೂ ವಿವಿಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು. ಜಗದೇವ ದಿಗ್ಗಾಂವಕರ್ ಸ್ವಾಗತಿಸಿದರು, ನರಸಪ್ಪ ಚಿನ್ನಾಕಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಗ್ರಾಮೀಣಾಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅನನ್ಯ: ನಾಗವೇಣಿ ಅಭಿಮತ.

ಚಿತ್ತಾಪುರ: "ಗ್ರಾಮೀಣ ಭಾಗದ ಆರ್ಥಿಕ ಮತ್ತು ಸಾಮಾಜಿಕ ಬದಲಾವಣೆಯಲ್ಲಿ ಮಹಿಳೆಯರ ಪಾತ್ರ ಬಹಳ ದೊಡ್ಡದಿದೆ. ಹೀಗಾಗಿ ಗ್ರಾಮೀಣಾಭಿವೃದ್ಧಿಯಲ್...