•ಕಳಪೆ ಕಾಮಗಾರಿ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ.
•ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ.
ಚಿತ್ತಾಪುರ: ಬೇಸಿಗೆ ಆರಂಭಕ್ಕೂ ಮುನ್ನವೇ ಜಿಲ್ಲೆಯಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವುದರಿಂದ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಈಗಿನಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಂಗಳವಾರ ಪಟ್ಟಣದ ಪ್ರಜಾಸೌಧದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು "ಕ್ಷೇತ್ರದ ಸನ್ನತಿ ಗ್ರಾಮದ ಜನರು ನದಿ ದಂಡೆಯ ಮೇಲಿದ್ದರೂ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಎಂದರೆ ನಮ್ಮ ಅಧಿಕಾರಿಗಳ ಕಾರ್ಯವೈಖರಿ ಎಂತದ್ದು ಎಂಬುದು ತಿಳಿಯುತ್ತದೆ," ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು. ಕುಡಿಯುವ ನೀರಿಗಾಗಿ 3.68 ಕೋಟಿ ರೂ.ಗಳಿಗೂ ಅಧಿಕ ಅನುದಾನ ನೀಡಿದ್ದರೂ, ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆಯಿಂದ ಕಾಮಗಾರಿಗಳು ವಿಳಂಬವಾಗುತ್ತಿವೆ ಎಂದು ತರಾಟೆಗೆ ತೆಗೆದುಕೊಂಡರು.
ಅಭಿವೃದ್ಧಿ ಕಾಮಗಾರಿ ಮತ್ತು ಅನುದಾನ ಜಿಲ್ಲೆಯ ಅಭಿವೃದ್ಧಿಗೆ ಅನುದಾನದ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ವಿವಿಧ ಯೋಜನೆಗಳ ವಿವರ ನೀಡಿದ ಅವರು ರಸ್ತೆ ಅಭಿವೃದ್ಧಿ: ಪ್ರಗತಿ ಪಥ ಯೋಜನೆಯಡಿ ಚಿತ್ತಾಪುರಕ್ಕೆ 110 ಕಿ.ಮೀ ರಸ್ತೆ ಮಂಜೂರಾಗಿದ್ದು, ಹಣಾದಿ ರಸ್ತೆಗಳಿಗೆ 47 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.ಶಿಕ್ಷಣ ಮತ್ತು ಮಠಗಳು: ಶಾಲೆಗಳ ಅಭಿವೃದ್ಧಿಗೆ 16 ಕೋಟಿ ರೂ. ಹಾಗೂ ವಿವಿಧ ಮಠಗಳಿಗೆ 8.5 ಕೋಟಿ ರೂ. ಅನುದಾನ ನೀಡಲಾಗಿದೆ.ಅಪೂರ್ಣಗೊಂಡಿರುವ ಸಮುದಾಯ ಭವನಗಳ ಪಟ್ಟಿ ನೀಡುವಂತೆ ಸೂಚಿಸಿದ ಅವರು, ಮೇ ತಿಂಗಳೊಳಗೆ ಇವುಗಳನ್ನು ಪೂರ್ಣಗೊಳಿಸಲು ಬಾಕಿ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.
"ಕಡಿಮೆ ಮೊತ್ತಕ್ಕೆ ಟೆಂಡರ್ ಹಿಡಿದು ಗುಣಮಟ್ಟವಿಲ್ಲದ ಕೆಲಸ ಮಾಡುವ ಗುತ್ತಿಗೆದಾರರ ಕೈಗೊಂಬೆಯಾಗಬೇಡಿ. ಸಣ್ಣ ಕೆಲಸವೆಂದು ನಿರ್ಲಕ್ಷ್ಯ ವಹಿಸಿ ಕಳಪೆ ಕಾಮಗಾರಿ ನಡೆಸಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಯಾರಿಗೂ ಹೆದರದೆ ಗುಣಮಟ್ಟದ ಕೆಲಸ ಮಾಡಿಸಿ," ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುವ ಅಧಿಕಾರಿಗಳ ವಿರುದ್ಧ ದೂರುಗಳು ಬರುತ್ತಿವೆ. ಇಂತಹ ವರ್ತನೆ ಮುಂದುವರಿದರೆ ಶಿಸ್ತುಕ್ರಮ ಅನಿವಾರ್ಯ ಎಂದು ಎಚ್ಚರಿಸಿದ ಸಚಿವರು, ಅಕ್ರಮ ಮದ್ಯ ಮಾರಾಟ ಮತ್ತು ತಡರಾತ್ರಿಯವರೆಗೆ ತೆರೆದಿರುವ ದಾಬಾಗಳ ಮೇಲೆ ಕ್ರಮ ಕೈಗೊಳ್ಳಲು ಪೊಲೀಸ್ ಮತ್ತು ಅಬಕಾರಿ ಇಲಾಖೆಗೆ ಸೂಚಿಸಿದರು.
ಸಭೆಯಲ್ಲಿ ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಪಂ ಸಿಇಓ ಭಂವರಸಿಂಗ್ ಮೀನಾ, ಎಸ್ಪಿ ಅಟ್ಟೂರು ಶ್ರೀನಿವಾಸಲು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.