ಚಿತ್ತಾಪುರ: ಸಚಿವರು ತಮ್ಮ ವೈಯಕ್ತಿಕ ಹಣದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಪಠ್ಯಪುಸ್ತಕ ಆಧಾರಿತ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡ 35,000 ಪುಸ್ತಕಗಳನ್ನು ವಿತರಿಸುವ ಮಹತ್ವದ ಕಾರ್ಯಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿದ್ದಾರೆ.
ಗಣರಾಜ್ಯೋತ್ಸವ ದಿನದಂದು ಕಲಬುರಗಿಯಲ್ಲಿ ಸಾಂಕೇತಿಕವಾಗಿ ಐವರು ವಿದ್ಯಾರ್ಥಿಗಳಿಗೆ ಈ ಮಾದರಿ ಪ್ರಶ್ನೆ ಪತ್ರಿಕೆ ಕೈಪಿಡಿಗಳನ್ನು ವಿತರಿಸಲಾಯಿತು. ಈ ಕ್ರಮವು ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆಗೆ ಬಹುಪಯೋಗಿಯಾಗಲಿದೆ ಎಂದು ಶಿಕ್ಷಣ ವಲಯದವರು ಅಭಿಪ್ರಾಯಪಟ್ಟಿದ್ದಾರೆ.
ತಾಲೂಕಿನ ಎಲ್ಲಾ ಸರ್ಕಾರಿ ಪ್ರೌಢ ಶಾಲೆಗಳ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಒಟ್ಟು 4,800 ಮಾದರಿ ಪ್ರಶ್ನೆ ಪತ್ರಿಕೆ ಪುಸ್ತಕಗಳನ್ನು ವಿತರಿಸಲಾಗಿದೆ. ಈಗಾಗಲೇ ತಾಲೂಕಿನ ಶೇಕಡಾ 95ರಷ್ಟು ಶಾಲೆಗಳಿಗೆ ಈ ಪುಸ್ತಕಗಳನ್ನು ವಿತರಿಸಲಾಗಿದೆ. ಉಳಿದ ಶಾಲೆಗಳಿಗೂ ಶೀಘ್ರದಲ್ಲೇ ಪುಸ್ತಕ ವಿತರಣೆ ಪೂರ್ಣಗೊಳ್ಳಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ಕ್ಷೇತ್ರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡುತ್ತಿರುವ ಈ ಸಹಕಾರ ಶ್ಲಾಘನೀಯವಾಗಿದೆ ಎಂದು ಶಿಕ್ಷಕರು ಹಾಗೂ ಪಾಲಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ