ಚಿತ್ತಾಪುರ: ತಾಲ್ಲೂಕಿನ ಭಾಗೋಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭವು ಅತ್ಯಂತ ಅರ್ಥಪೂರ್ಣವಾಗಿ ಜರುಗಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತಾಲ್ಲೂಕು ಸಿಡಿಪಿಒ ಆರತಿ ಪಾಟೀಲ ಅವರು ಮಾತನಾಡಿ, "ವಿದ್ಯಾರ್ಥಿ ಜೀವನದಲ್ಲಿ ಹತ್ತನೇ ತರಗತಿಯು ಅತ್ಯಂತ ಪ್ರಮುಖ ಘಟ್ಟವಾಗಿದೆ. ಶಿಸ್ತು ಮತ್ತು ಸಮಯ ಪ್ರಜ್ಞೆಯನ್ನು ಮೈಗೂಡಿಸಿಕೊಂಡು ಪರೀಕ್ಷೆಯನ್ನು ಎದುರಿಸಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ," ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ರಾಯಚೂರು ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿಗಳಾದ ಡಾ. ಮಹಾಂತಗೌಡ ಪಾಟೀಲ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಶಿಕ್ಷಣದ ಜೊತೆಗೆ ಕೃಷಿ ಮತ್ತು ತಾಂತ್ರಿಕ ಜ್ಞಾನದ ಅಗತ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ಗ್ರಾಮದ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಇಂದು ಉನ್ನತ ಮಟ್ಟಕ್ಕೆ ಏರುತ್ತಿರುವುದು ಹೆಮ್ಮೆಯ ವಿಷಯ ಎಂದರು.
ಎಸ್ಡಿಎಂಸಿ ಅಧ್ಯಕ್ಷ ದೇವೇಂದ್ರ ಡೋಣಗಾಂವ್ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳು ಆತ್ಮವಿಶ್ವಾಸ ಕಳೆದುಕೊಳ್ಳದೆ ಧೈರ್ಯವಾಗಿ ಪರೀಕ್ಷೆ ಬರೆಯಬೇಕು ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ರಾಜೇಂದ್ರಪ್ಪ ಅರಣಕಲ್ ಅವರು ಕೂಡ ತಮ್ಮ ವಿಚಾರಗಳನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಶಾಲೆ ಮುಖ್ಯಗುರುಗಳಾದ ರವೀಂದ್ರ ರೆಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಕೋರಿದರು. ವೇದಿಕೆಯ ಮೇಲೆ ಪ್ರಮುಖರಾದ ಶರಣಬಸಪ್ಪ ಎನ್. ಬೆಂಕಿ, ರಮೇಶ ನೀಲಕಂಠ, ಮಲ್ಲಿಕಾರ್ಜುನ ಏರಿ, ಮಹಾಂತಪ್ಪ ಹಾಸಬಾ, ಶಿವಯೋಗಿ ಏರಿ, ವಸಂತ ಸೂಗೂರು ಹಾಗೂ ಸೂರ್ಯಕಾಂತ್ ನವದಗಿ ಸೇರಿದಂತೆ ಶಾಲೆಯ ಸರ್ವ ಶಿಕ್ಷಕರು ಮತ್ತು ಶಿಕ್ಷಕಿಯರು ಉಪಸ್ಥಿತರಿದ್ದರು.
ಸಹಶಿಕ್ಷಕ ಬಸಪ್ಪ ಎಂಬತನಾಳ ಅವರು ಎಲ್ಲರನ್ನೂ ಸ್ವಾಗತಿಸಿದರು. ದೈಹಿಕ ಶಿಕ್ಷಕಿ ಸುಧಾ ಮೇಡಂ ಅವರು ವಂದನಾರ್ಪಣೆ ಮಾಡಿದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ