ಜನತೆಯ ಸುದ್ದಿ ವಾಹಿನಿ

ಬುಧವಾರ, ಮೇ 6, 2026

ಮೋದಿ-ಷಾ ಅಬ್ಬರಕ್ಕೆ ಬಂಗಾಳದ ಸರ್ವಾಧಿಕಾರಿ ಸರ್ಕಾರ ಧೂಳಿಪಟ; ಮಣಿಕಂಠ ರಾಠೋಡ.

ಚಿತ್ತಾಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರ ದಕ್ಷ ನಾಯಕತ್ವದ ಅಬ್ಬರಕ್ಕೆ ಪಶ್ಚಿಮ ಬಂಗಾಳದಲ್ಲಿ ಸರ್ವಾಧಿಕಾರಿಯಂತೆ ಮೆರೆಯುತ್ತಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಧೂಳಿಪಟವಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಲಾಡ್ಜಿಂಗ್ ಕ್ರಾಸ್ ಬಳಿ ಸೋಮವಾರ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳ ಚುನಾವಣಾ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು "ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಯಾರಿಗೂ ಎದೆಗುಂದದೆ ಧೈರ್ಯದಿಂದ ಚುನಾವಣೆ ಎದುರಿಸಿದ್ದರಿಂದ 15 ವರ್ಷಗಳ ಮಮತಾ ಆಡಳಿತ ಅಂತ್ಯಗೊಂಡಿದೆ. ಅದೇ ಮಾದರಿಯಲ್ಲಿ ಚಿತ್ತಾಪುರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಸಹ ಯಾರಿಗೂ ಹೆದರುವ ಅವಶ್ಯಕತೆಯಿಲ್ಲ. ಬಿಜೆಪಿ ವಿಶ್ವದಲ್ಲೇ ಅತಿದೊಡ್ಡ ಪಕ್ಷವಾಗಿದ್ದು, ನಮ್ಮನ್ನು ಎದುರಿಸಲು ಯಾರಿಂದಲೂ ಸಾಧ್ಯವಿಲ್ಲ," ಎಂದು ಕಾರ್ಯಕರ್ತರಲ್ಲಿ ಧೈರ್ಯ ತುಂಬಿದರು.

ಮಮತಾ ಬ್ಯಾನರ್ಜಿ ಸರ್ಕಾರವನ್ನು 'ರಾಕ್ಷಸಿ ರೂಪದ ಸರ್ಕಾರ' ಎಂದು ಟೀಕಿಸಿದ ಅವರು, "ಅಲ್ಲಿ ಸರ್ವಾಧಿಕಾರಿ ಧೋರಣೆ ಮತ್ತು ಭಯದ ವಾತಾವರಣವಿತ್ತು. ಮೋದಿ ಮತ್ತು ಅಮಿತ್ ಷಾ ಅವರು ಕಾರ್ಯಕರ್ತರಲ್ಲಿ ಚೈತನ್ಯ ತುಂಬಿದ್ದರಿಂದಲೇ ಈ ಅಭೂತಪೂರ್ವ ಗೆಲುವು ಸಾಧ್ಯವಾಗಿದೆ. ಬಿಜೆಪಿಯವರನ್ನು ರಸ್ತೆಗಿಳಿಯದಂತೆ ಮಾಡುವುದು ಹಾಗೂ ಆರ್‌ಎಸ್‌ಎಸ್ ಪಥಸಂಚಲನ ತಡೆಯುವ ಸಂಚು ನಡೆದಿತ್ತು. ಆದರೆ ಇಂದು ದೇಶವೇ ತಿರುಗಿ ನೋಡುವಂತೆ ಅದ್ದೂರಿ ಗೆಲುವು ಲಭಿಸಿದೆ," ಎಂದರು.

ಕ್ಷೇತ್ರದ ರಾಜಕೀಯದ ಕುರಿತು ಮಾತನಾಡಿದ ರಾಠೋಡ, "ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ನಡೆದ ಕಾರಣ ಸಾವಿರಾರು ಬೋಕಸ್ ಮತಗಳು ರದ್ದಾಗಿವೆ. ಅದೇ ರೀತಿ ಚಿತ್ತಾಪುರದಲ್ಲೂ ಎಸ್‌ಐಆರ್ ಪ್ರಕ್ರಿಯೆ ನಡೆಯಲಿದ್ದು, ಇಲ್ಲಿನ ಸುಮಾರು 18 ಸಾವಿರ ಬೋಕಸ್ ಮತಗಳು ಕಟ್ ಆಗಲಿವೆ. ಆಗ ಇಲ್ಲಿನ ಕಾಂಗ್ರೆಸ್ ಸರ್ಕಾರವೂ ಧೂಳಿಪಟವಾಗುವುದು ನಿಶ್ಚಿತ," ಎಂದು ಭವಿಷ್ಯ ನುಡಿದರು.

"ಬರುವ ದಿನಗಳಲ್ಲಿ ಇಲ್ಲಿನ ಶಾಸಕರಿಗೆ ಭವಿಷ್ಯವಿಲ್ಲ. ಅವರ ಹಿಂದೆ ಓಡಾಡುವುದನ್ನು ಬಿಡಿ. ನಮ್ಮವರೇ ಕೆಲವು ಮುಖಂಡರು ಶಾಸಕರನ್ನು ಭೇಟಿ ಮಾಡಿ ಫೋಟೋ ಶೂಟ್ ಮಾಡಿಸಿಕೊಳ್ಳುತ್ತಿರುವುದು ಪಕ್ಷದ ನಾಯಕರ ಗಮನದಲ್ಲಿದೆ."

— ಮಣಿಕಂಠ ರಾಠೋಡ, ಬಿಜೆಪಿ ಮುಖಂಡ.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಭಜಂತ್ರಿ, ಪುರಸಭೆ ಮಾಜಿ ಸದಸ್ಯ ಶಾಮ್ ಮೇಧಾ, ಅಶ್ವಥ್‌ ರಾಠೋಡ ಮಾತನಾಡಿದರು. ವೇದಿಕೆಯ ಮೇಲೆ ಬಿಜೆಪಿ ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ಮಂಡಲ ಪ್ರಧಾನ ಕಾರ್ಯದರ್ಶಿ ನಾಗರಾಜ ಹೂಗಾರ, ಮಲ್ಲಿಕಾರ್ಜುನ ಇಟಗಿ, ಯುವ ಅಧ್ಯಕ್ಷ ದೇವರಾಜ್ ತಳವಾರ ಸೇರಿದಂತೆ ಪ್ರಮುಖರಾದ ಬಸವರಾಜ ಸಂಕನೂರ, ರಮೇಶ್ ಬೊಮ್ಮನಳ್ಳಿ, ಪ್ರಭು ಗಂಗಾಣಿ ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾರ್ಯಕರ್ತರು ಜೈಘೋಷಗಳನ್ನು ಕೂಗಿ, ಪಟಾಕಿ ಸಿಡಿಸಿ ಹಾಗೂ ಸಿಹಿ ಹಂಚುವ ಮೂಲಕ ವಿಜಯೋತ್ಸವವನ್ನು ಸಡಗರದಿಂದ ಆಚರಿಸಿದರು.

ಗುರುವಾರ, ಏಪ್ರಿಲ್ 30, 2026

ದೇಶಿ ಗೋವಂಶ ‘ರಾಷ್ಟ್ರಮಾತೆ’ ಎಂದು ಘೋಷಿಸಲು ಶ್ರೀರಾಮ ಸೇನೆ ಆಗ್ರಹ.

ಚಿತ್ತಾಪುರ: ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿರುವ ಗೋವಿನ ಸಂತತಿಯನ್ನು ಉಳಿಸುವುದು ಇಂದಿನ ತುರ್ತು ಅಗತ್ಯವಾಗಿದೆ. ಹೀಗಾಗಿ ದೇಶಿ ಗೋವಂಶವನ್ನು ‘ರಾಷ್ಟ್ರಮಾತೆ’ ಎಂದು ಘೋಷಿಸಲು ರಾಜ್ಯ ಸರ್ಕಾರವು ಕೇಂದ್ರಕ್ಕೆ ವಿಶೇಷ ಶಿಫಾರಸು ಕಳುಹಿಸಬೇಕು ಎಂದು ಶ್ರೀರಾಮ ಸೇನೆಯ ಕಾರ್ಯಕರ್ತರು ಒತ್ತಾಯಿಸಿದರು.

ಪಟ್ಟಣದ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರ ಮೂಲಕ ರಾಷ್ಟ್ರಪತಿ, ಪ್ರಧಾನಮಂತ್ರಿ, ರಾಜ್ಯಪಾಲ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ಸಂಘಟನೆಯ ಮುಖಂಡರು ಮಾತನಾಡಿದರು.

ಸಂವಿಧಾನದ 48ನೇ ವಿಧಿಗೆ ಅಗತ್ಯ ತಿದ್ದುಪಡಿ ತಂದು ದೇಶಾದ್ಯಂತ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವುದರ ಜೊತೆಗೆ, ರಾಜ್ಯ ಮಟ್ಟದಲ್ಲೂ ದೇಶಿ ಗೋವಂಶವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಬೇಕು. ಗೋ ಕಳ್ಳಸಾಗಣೆ ಮತ್ತು ಹತ್ಯೆಯನ್ನು ಜಾಮೀನು ರಹಿತ ಅಪರಾಧ ಎಂದು ಪರಿಗಣಿಸಬೇಕು. ತಪ್ಪಿತಸ್ಥರಿಗೆ ಆಜೀವ ಕಾರಾಗೃಹ ಶಿಕ್ಷೆ ಮತ್ತು ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತಹ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಶ್ರೀರಾಮ ಸೇನೆಯ ಮುಖಂಡ ವಿಶ್ವಾರಾಧ್ಯ ತಳವಾರ ಮಾತನಾಡಿ, "ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ‘ನಂದಿಶಾಲೆ’ ಹಾಗೂ ಜಿಲ್ಲಾ ಮಟ್ಟದಲ್ಲಿ ಕನಿಷ್ಠ ಒಂದು ಮಾದರಿ ‘ಗೋ ಅಭಯಾರಣ್ಯ’ ಸ್ಥಾಪಿಸಬೇಕು. ಹೆದ್ದಾರಿಗಳಲ್ಲಿ ಅಪಘಾತಕ್ಕೀಡಾಗುವ ಗೋವುಗಳ ಚಿಕಿತ್ಸೆಗಾಗಿ ಪ್ರತಿ 50 ರಿಂದ 100 ಕಿ.ಮೀ ಅಂತರದಲ್ಲಿ ‘ಗೋ-ವಾಹಿನಿ’ ಆಂಬುಲೆನ್ಸ್ ಮತ್ತು ಟ್ರಾಮಾ ಸೆಂಟರ್‌ಗಳ ವ್ಯವಸ್ಥೆ ಕಲ್ಪಿಸಬೇಕು," ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶ್ರೀರಾಮ ಸೇನೆಯ ಮುಖಂಡರಾದ ವಾಲ್ಮೀಕ ಚವ್ಹಾಣ, ಸಂಜಯ ರಾಠೋಡ, ವೆಂಕಟೇಶ ಚವ್ಹಾಣ, ಆಕಾಶ, ಗುರುರಾಜ, ರೋಹನ್ ಜಾಧವ್, ಅರುಣ ಪವಾರ, ಈಶ್ವರ ರಾಠೋಡ, ಆದಿತ್ಯ, ಕುಮಾರ ರಾಠೋಡ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

ಚಿತ್ತಾಪುರ ಸರ್ಕಾರಿ ಪದವಿ ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಎಲ್ಲಾ ಭಾಗ್ಯಗಳಲ್ಲಿ ಆರೋಗ್ಯ ಭಾಗ್ಯ ಪ್ರಮುಖ: ಗುತ್ತೇದಾರ 

ಚಿತ್ತಾಪುರ: ಎಲ್ಲಾ ಭಾಗ್ಯಗಳಲ್ಲಿ ಆರೋಗ್ಯ ಭಾಗ್ಯ ಬಹಳ ಪ್ರಮುಖವಾಗಿದೆ ಎಂದು ಹಿರಿಯ ಪತ್ರಕರ್ತ ಕಾಶಿನಾಥ ಹೇಳಿದರು.

ಪಟ್ಟಣದ ರೇವಣಸಿದ್ದಪ್ಪ ಕಾಂತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ತಾಲೂಕ ಆಸ್ಪತ್ರೆ ಚಿತ್ತಾಪುರ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಭಾರತೀಯ ರೆಡ್ ಕ್ರಾಸ್ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 2025-26ನೇ ಶೈಕ್ಷಣಿಕ ಸಾಲಿನ ಒಂದು ದಿವಸದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಆರೋಗ್ಯಯುತ ಸಮಾಜ ನಿರ್ಮಾಣ ಆಗಬೇಕಾದರೆ ಅದು ಯುವಕ ಯುವತಿಯರ ಮೇಲಿದೆ ಎಂದರು.

ಇಂದಿನ ಯುವಕರು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಪ್ರಸ್ತುತ ಸಮಾಜದಲ್ಲಿ ದೇವಸ್ಥಾನಗಳು ಹಾಗೂ ದಾವಖಾನೆಗಳು ಹೌಸ್ ಫುಲ್ ಆಗಿವೆ, ಪೊಲೀಸ್ ಠಾಣೆಗಳ ಸಂಖ್ಯೆ ಹೆಚ್ಚಾಗಿವೆ ಇದೇ ದುರಂತ ಎಂದು ಮಾರ್ಮಿಕವಾಗಿ ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ದಂತ ಆರೋಗ್ಯ ಅಧಿಕಾರಿ ಡಾ. ಖನಿಜ್ ಫಾತಿಮಾ ಮಾತನಾಡಿ, ಜೀವನ ಶೈಲಿ ಹೇಗೆ ಇರುತ್ತದೆ ಹಾಗೆ ಆರೋಗ್ಯ ಇರುತ್ತದೆ. ಈ ನಿಟ್ಟಿನಲ್ಲಿ ಪ್ರಮುಖವಾಗಿ ಯುವಕರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು ಅದರಲ್ಲೂ ಹಲ್ಲಿನ ಸುರಕ್ಷೆ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಸರ್ಕಾರಿ ಆಸ್ಪತ್ರೆಯ ಆಪ್ತ ಸಮಾಲೋಚಕಿ ಸುಜ್ಞಾನಿ ಪಾಟೀಲ್ ಮಾತನಾಡಿ, ಇಂದಿನ ಯುವಕರೇ ಮುಂದಿನ ಪ್ರಜೆಗಳು ಎಂದು ಹೇಳಿದ ಅವರು ಪ್ರಮುಖವಾಗಿ ಎಚ್ಐವಿ ಸೋಂಕಿನ ಕುರಿತು ವಿವರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಬಿರಾದಾರ ಮಾತನಾಡಿ, ಆರೋಗ್ಯವೇ ಭಾಗ್ಯ ಎನ್ನುವ ಸಂದೇಶವನ್ನು ಅರಿತುಕೊಂಡು ಇಂದಿನ ಯುವ ಜನಾಂಗ ಸಾಗಬೇಕು. ಈ ನಿಟ್ಟಿನಲ್ಲಿ ದೇವರು ಕೊಟ್ಟ ಉತ್ತಮ ಆರೋಗ್ಯವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು.

ಎನ್ಎಸ್ಎಸ್ ಅಧಿಕಾರಿಗಳಾದ ಡಾ. ಶಶಿಧರ್ ಯಡ್ರಾಮಿ, ಆಸ್ಮಾ ನಿಖತ್, ಪ್ರಾಧ್ಯಾಪಕರಾದ ಪ್ರೋ.ಮಲ್ಲಪ್ಪ ಮಾನೇಗಾರ್, ಶರಣಬಸಪ್ಪ ರಾಯ್ಕೋಟಿ, ರೋಹಿಣಿ ಕಲ್ಮಟ್, ನಾಗವೇಣಿ, ಲಕ್ಷ್ಮೀಪುತ್ರ ಪಾಸೋಡಿ, ಕೈಲಾಸಪತಿ ವಿಶ್ವಕರ್ಮ, ಶರಣಪ್ಪ ದಿಗ್ಗಾಂವ, ಮರೇಪ್ಪ ಮೇತ್ರೆ, ಶ್ರೀಕಾಂತ್, ಅಭಿಷೇಕ್, ವಿಜಯಲಕ್ಷ್ಮೀ ರಾಠೋಡ, ಮಂಜುನಾಥ ದೇಶಪಾಂಡೆ, ಆಸ್ಪತ್ರೆಯ ನಿಜಾಮುದ್ದೀನ್, ಗುರುರಾಜ್ ಮುಗುಳಿ, ಪತ್ರಕರ್ತ ಸಂತೋಷಕುಮಾರ ಕಟ್ಟಿಮನಿ ಸೇರಿದಂತೆ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಎನ್ಎಸ್ಎಸ್ ಅಧಿಕಾರಿ ಡಾ. ಸಂಗಪ್ಪ ಮಾಮನಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಸುಗುರೇಶ್ವರ ಆರ್ ಮಠಪತಿ ಸ್ವಾಗತಿಸಿದರು, ಮಲ್ಲಪ್ಪ ತೊಟ್ನಳ್ಳಿ ನಿರೂಪಿಸಿದರು, ಡಾ. ವಿಲಾಸ್ ವಂದಿಸಿದರು. ನಂತರ ಆರೋಗ್ಯ ತಪಾಸಣೆ ನಡೆಯಿತು. ವಿದ್ಯಾರ್ಥಿಗಳು ಶಿಬಿರದ ಸಂಪೂರ್ಣ ಸದುಪಯೋಗ ಪಡಿಸಿಕೊಂಡರು.

ಸೋಮವಾರ, ಏಪ್ರಿಲ್ 27, 2026

ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶೇ.100 ಫಲಿತಾಂಶ: ವಿದ್ಯಾರ್ಥಿಗಳ ಭರ್ಜರಿ ಸಾಧನೆ

jtvkannada
ಚಿತ್ತಾಪುರ: ಪಟ್ಟಣದ ನಾಗಾವಿ ಕ್ಯಾಂಪಸ್‌ನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಎಸ್.ಸಿ) 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ದಾಖಲಿಸುವ ಮೂಲಕ ತಾಲ್ಲೂಕಿನ ಗಮನ ಸೆಳೆದಿದೆ.

ಶಾಲೆಯ ಈ ಸಾಧನೆಯ ಕುರಿತು ಪ್ರಾಚಾರ್ಯರಾದ ಬಸವರಾಜ ಅವಂಟಿ ಅವರು ಹರ್ಷ ವ್ಯಕ್ತಪಡಿಸಿ ಮಾತನಾಡಿದ ಅವರು  ಒಟ್ಟು ಹಾಜರಾದವರು 43 ವಿದ್ಯಾರ್ಥಿಗಳು,ತೇರ್ಗಡೆಯಾದವರು 43 ವಿದ್ಯಾರ್ಥಿಗಳು (ಶೇ.100 ಫಲಿತಾಂಶ) ಉನ್ನತ ಶ್ರೇಣಿ (Distinction) 10 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ 29 ವಿದ್ಯಾರ್ಥಿಗಳು, ದ್ವಿತೀಯ ಶ್ರೇಣಿ: 02 ವಿದ್ಯಾರ್ಥಿಗಳು, ಸಾಮಾನ್ಯ ಶ್ರೇಣಿ:,02 ವಿದ್ಯಾರ್ಥಿಗಳು ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದರು.

ಹರ್ಷಾನಂದ್: 625ಕ್ಕೆ 594 ಅಂಕಗಳನ್ನು (95.04%) ಪಡೆಯುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.ಕೇಶವ್ ನಾಯ್ಯೋಡಿ: 591 ಅಂಕಗಳನ್ನು (94.56%) ಪಡೆಯುವ ಮೂಲಕ ದ್ವಿತೀಯ ಸ್ಥಾನ ಪಡೆದಿದ್ದಾರೆ.

"ವಿದ್ಯಾರ್ಥಿಗಳ ನಿರಂತರ ಪರಿಶ್ರಮ ಹಾಗೂ ಶಿಕ್ಷಕ ವೃಂದದ ಸೂಕ್ತ ಮಾರ್ಗದರ್ಶನದಿಂದಾಗಿ ಈ ಅತ್ಯುತ್ತಮ ಫಲಿತಾಂಶ ಲಭ್ಯವಾಗಿದೆ. ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು." 

— ಬಸವರಾಜ ಅವಂಟಿ, ಪ್ರಾಚಾರ್ಯರು

ಈ ಗಮನಾರ್ಹ ಸಾಧನೆಗೆ ಶಾಲೆಯ ಪ್ರಾಚಾರ್ಯರು, ಬೋಧಕ ಸಿಬ್ಬಂದಿ ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಉತ್ತೀರ್ಣರಾದ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

ಪೊಲೀಸರ ಮಿಂಚಿನ ಕಾರ್ಯಾಚರಣೆ: 'ಡಾನ್'ಗಳಿಗೆ ಬೆಳ್ಳಂಬೆಳಗ್ಗೆ ಖಾಕಿ ಶಾಕ್!

​ಗಲ್ಲಿಗಳಲ್ಲಿ ದಾದಾಗಿರಿ ನಡೆಸುವ ಕಿಡಿಗೇಡಿಗಳಿಗೆ ಡಿವೈಎಸ್‌ಪಿ ಖಡಕ್ ಎಚ್ಚರಿಕೆ; 

50ಕ್ಕೂ ಹೆಚ್ಚು ರೌಡಿ ಶೀಟರ್‌ಗಳ ಮನೆಗಳ ಮೇಲೆ ದಾಳಿ.

​ಚಿತ್ತಾಪುರ: ಪಟ್ಟಣದಲ್ಲಿ ತಾವೇ ‘ಡಾನ್’ಗಳೆಂದು ಮೆರೆಯುತ್ತಾ ಸಾರ್ವಜನಿಕರ ನೆಮ್ಮದಿ ಕೆಡಿಸುತ್ತಿದ್ದ ಕಿಡಿಗೇಡಿಗಳಿಗೆ ಚಿತ್ತಾಪುರ ಮತ್ತು ವಾಡಿ ಪೊಲೀಸರು ಸದ್ದಿಲ್ಲದೆ ಶಾಕ್ ನೀಡಿದ್ದಾರೆ. ಶನಿವಾರ ಬೆಳ್ಳಂಬೆಳಗ್ಗೆ ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ರೌಡಿಗಳ ಮನೆಗಳಿಗೆ ಲಗ್ಗೆ ಇಟ್ಟ ಪೊಲೀಸರು, "ಇನ್ಮುಂದೆ ದಾದಾಗಿರಿ ನಡೆಸಿದರೆ ಅಟ್ಟಾಡಿಸಿ ಹೊಡೆಯುತ್ತೇವೆ" ಎಂಬ ಖಡಕ್ ಸಂದೇಶ ರವಾನಿಸಿದ್ದಾರೆ.

​ಡಿವೈಎಸ್‌ಪಿ ಶಂಕರಗೌಡ ಪಾಟೀಲ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆ ಎಷ್ಟು ಆಕಸ್ಮಿಕವಾಗಿತ್ತೆಂದರೆ, ನಿದ್ರೆಯಲ್ಲಿದ್ದ ಹಳೆ ಕದೀಮರು ಬಾಗಿಲು ತೆರೆಯುತ್ತಿದ್ದಂತೆ ಪೊಲೀಸರನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಚಿತ್ತಾಪುರ ವೃತ್ತದ ವ್ಯಾಪ್ತಿಯಲ್ಲಿ ಬರುವ ಸುಮಾರು 50ಕ್ಕೂ ಹೆಚ್ಚು ರೌಡಿ ಶೀಟರ್‌ಗಳ ಮನೆಗಳನ್ನು ಪೊಲೀಸರು ಇಂಚಿಂಚಾಗಿ ಜಾಲಾಡಿದ್ದಾರೆ.

​ಮನೆಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿರಬಹುದಾದ ಮಾರಕಾಸ್ತ್ರಗಳು ಹಾಗೂ ಮಾದಕ ದ್ರವ್ಯಗಳಿಗಾಗಿ ಹದ್ದಿನ ಕಣ್ಣಿನಿಂದ ತಪಾಸಣೆ ನಡೆಸಲಾಯಿತು. ಈ ವೇಳೆ ಪ್ರತಿಯೊಬ್ಬ ರೌಡಿಯ ಇತ್ತೀಚಿನ ಚಟುವಟಿಕೆಗಳು, ಅವರು ಯಾರನ್ನು ಭೇಟಿಯಾಗುತ್ತಿದ್ದಾರೆ ಮತ್ತು ಅವರ ಸಂಪರ್ಕದಲ್ಲಿರುವವರು ಯಾರು ಎಂಬ ಸಂಪೂರ್ಣ ಮಾಹಿತಿಯನ್ನು ಪೊಲೀಸರು ಕಲೆಹಾಕಿದ್ದಾರೆ.


​"ರಸ್ತೆಯಲ್ಲಿ ತಲೆ ಎತ್ತಿ ಓಡಾಡಬೇಕಿರುವುದು ಜನಸಾಮಾನ್ಯರೇ ಹೊರತು ರೌಡಿಗಳಲ್ಲ. ಕಾನೂನಿಗೆ ಗೌರವ ಕೊಡದವರಿಗೆ ಪೊಲೀಸ್ ಲಾಠಿಯೇ ಉತ್ತರ ನೀಡಲಿದೆ."
— ಪೊಲೀಸ್ ಇಲಾಖೆಯ ಖಡಕ್ ಎಚ್ಚರಿಕೆ.

​ಸಮಾಜಘಾತುಕ ಶಕ್ತಿಗಳ ಎಡೆಮುರಿ ಕಟ್ಟಲು ಫೀಲ್ಡಿಗಿಳಿದಿರುವ ಖಾಕಿ ಪಡೆ, ಈಗಾಗಲೇ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ಪಟ್ಟಿಯನ್ನು ಸಿದ್ಧಪಡಿಸಿದೆ. ಕಾನೂನು ಕೈಗೆತ್ತಿಕೊಂಡು ಸಾರ್ವಜನಿಕರ ನೆಮ್ಮದಿ ಕೆಡಿಸುವವರ ಅಡ್ಡಾಗಳನ್ನು ಧೂಳೀಪಟ ಮಾಡುವುದಾಗಿ ಪೊಲೀಸರು ಈ ದಾಳಿಯ ಮೂಲಕ ನೇರ ಎಚ್ಚರಿಕೆ ನೀಡಿದ್ದಾರೆ.

ಈ ಮಿಂಚಿನ ದಾಳಿಯಲ್ಲಿ ಚಿತ್ತಾಪುರ ಪಿಎಸ್‌ಐ ಮಂಜುನಾಥ ರೆಡ್ಡಿ, ವಾಡಿ ಪಿಎಸ್‌ಐ ತಿರುಮಲೇಶ್ ಕೆ. ಸೇರಿದಂತೆ ಎರಡೂ ಠಾಣೆಗಳ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಪೊಲೀಸರ ಈ ಧೀರ ನಡೆಯನ್ನು ಕಂಡು ಪಟ್ಟಣದ ಜನಸಾಮಾನ್ಯರು ನಿಟ್ಟುಸಿರು ಬಿಟ್ಟಿದ್ದಾರೆ.

ಅನುಭವ ಮಂಟಪವೇ ವಿಶ್ವದ ಪ್ರಪ್ರಥಮ ಸಂಸತ್ತು: ಲೇಖಕಿ ಪೂಜಾ ಭಂಕಲಗಿ.

ಚಿತ್ತಾಪುರ: "ಬ್ರಿಟನ್ ದೇಶದವರು ತಮ್ಮ ಸಂಸತ್ತೇ ಮೊದಲನೆಯದು ಎಂದು ಪ್ರತಿಪಾದಿಸುತ್ತಾರೆ. ಆದರೆ, ಅದಕ್ಕಿಂತಲೂ ಶತಮಾನಗಳ ಹಿಂದೆ ಕರುನಾಡಿನಲ್ಲಿ ವಿವಿಧ ವರ್ಗದ ಶರಣರನ್ನು ಒಗ್ಗೂಡಿಸಿ, ಎಲ್ಲರಿಗೂ ಸಮಾನ ಮಾನ್ಯತೆ ನೀಡಿದ ಬಸವಣ್ಣನವರು ಸ್ಥಾಪಿಸಿದ 'ಅನುಭವ ಮಂಟಪ'ವೇ ಜಗತ್ತಿನ ಪ್ರಪ್ರಥಮ ಪಾರ್ಲಿಮೆಂಟ್," ಎಂದು ಲೇಖಕಿ ಪೂಜಾ ಆರ್. ಭಂಕಲಗಿ ಅಭಿಮತ ವ್ಯಕ್ತಪಡಿಸಿದರು.

ತಾಲೂಕಿನ ಭಾಗೋಡಿ ಗ್ರಾಮದ ಶಾಂತಲಿಂಗೇಶ್ವರ ಮಠದಲ್ಲಿ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಭಾನುವಾರ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ 893ನೇ ಜಯಂತ್ಯೋತ್ಸವದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. "ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರು ಜಾತಿ ಪದ್ಧತಿ ಹಾಗೂ ಅಸಮಾನತೆಯ ವಿರುದ್ಧ ನಿರಂತರ ಹೋರಾಡಿದವರು. ಆದರೆ ಇಂದಿಗೂ ಸಮಾಜದಲ್ಲಿ ಅಸಮಾನತೆ ಚಾಲ್ತಿಯಲ್ಲಿರುವುದು ದುರ್ದೈವದ ಸಂಗತಿ," ಎಂದು ಬೇಸರ ವ್ಯಕ್ತಪಡಿಸಿದರು.

ದಿವ್ಯ ಸಾನಿಧ್ಯ ವಹಿಸಿದ್ದ ಗುರುಮಿಠಕಲ್ ಖಾಸಾ ಮಠದ ಶ್ರೀ ಶಾಂತವೀರ ಮುರಘರಾಜೇಂದ್ರ ಸ್ವಾಮೀಜಿ ಮಾತನಾಡಿ, "ವಚನ ಸಾಹಿತ್ಯವೆಂಬ ಮಹಾನ್ ಸಂಪತ್ತನ್ನು ಜಗತ್ತಿಗೆ ನೀಡಿದ ಬಸವಣ್ಣನವರು, ಸಮಾನತೆಯ ಸಮಾಜಕ್ಕಾಗಿ ಮಾಡಿದ ಕ್ರಾಂತಿ ಇತಿಹಾಸದಲ್ಲಿ ಹೊಸ ಬದಲಾವಣೆಗೆ ನಾಂದಿ ಹಾಡಿತು," ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಪದ್ಮಣ್ಣಗೌಡ ಪಾಟೀಲ ಮಾತನಾಡಿ, "ಬಸವಣ್ಣನವರ ತತ್ವಗಳು ಕೇವಲ ಭಾಷಣಕ್ಕೆ ಸೀಮಿತವಾಗಬಾರದು. ಅವು ನಮ್ಮ ದೈನಂದಿನ ಜೀವನದ ಹಾದಿಯಾಗಬೇಕು. ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಭಾವನೆ ಮೂಡಿದಾಗ ಮಾತ್ರ ಜಯಂತಿಯ ಆಚರಣೆ ಸಾರ್ಥಕವಾಗುತ್ತದೆ. ಗ್ರಾಮದ ಯುವಜನತೆ ಶರಣರ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ಸಮಾಜದ ಪ್ರಗತಿಗೆ ಶ್ರಮಿಸಬೇಕು," ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಸವಣ್ಣನವರ ಭಾವಚಿತ್ರದ ಭವ್ಯ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಪಂ ಮಾಜಿ ಅಧ್ಯಕ್ಷ ಶರಣಬಸಪ್ಪಗೌಡ ಪಾಟೀಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಉಪಾಧ್ಯಕ್ಷ ವೀರುಪಾಕ್ಷಪ್ಪ ಗಡ್ಡದ್, ನಾಗರಾಜ ಭಂಕಲಗಿ, ದೇವಿಂದ್ರ ಅರಣಕಲ್, ಬಸವರಾಜ ಪಾಟೀಲ್ ದಳಪತಿ, ರಾಮಲಿಂಗ ಬಾನಾರ್‌, ಭೀಮಣ್ಣ ಹೋತಿನಮಡಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ರಾಯಚೂರು ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ. ಮಹಾಂತಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಸವರಾಜ ಎಂಬತ್ನಾಳ ಸ್ವಾಗತಿಸಿದರು, ಮಾಲಾಶ್ರೀ ನಿರೂಪಿಸಿ, ವಂದಿಸಿದರು.

ಭಾನುವಾರ, ಏಪ್ರಿಲ್ 26, 2026

ಕಲಬುರಗಿ ಜಿಲ್ಲೆಗೆ ಚಿತ್ತಾಪುರ ತಾಲೂಕು ದ್ವಿತೀಯ: ಶೇ. 87.89 ಸಾಧನೆ.

ಚಿತ್ತಾಪುರ: ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಚಿತ್ತಾಪುರ ತಾಲೂಕು ಅಭೂತಪೂರ್ವ ಸುಧಾರಣೆ ಕಂಡಿದೆ. ಕಳೆದ ಬಾರಿ ಕೇವಲ ಶೇ. 40.88 ಫಲಿತಾಂಶ ಪಡೆದಿದ್ದ ತಾಲೂಕು, ಈ ಬಾರಿ ಶೇ. 87.89 ರಷ್ಟು ಅಂಕಗಳನ್ನು ಗಳಿಸುವ ಮೂಲಕ ಕಲಬುರಗಿ ಜಿಲ್ಲೆಯಲ್ಲಿಯೇ ದ್ವಿತೀಯ ಸ್ಥಾನ ಅಲಂಕರಿಸಿದೆ.

ತಾಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಎಂಬ ಭೇದವಿಲ್ಲದೆ ಎಲ್ಲಾ ಶಾಲೆಗಳು ಉತ್ತಮ ಸಾಧನೆ ತೋರಿವೆ ಸರ್ಕಾರಿ ಶಾಲೆಗಳು, ಹಾಜರಾದ 2952 ವಿದ್ಯಾರ್ಥಿಗಳಲ್ಲಿ 2601 ಮಂದಿ ಉತ್ತೀರ್ಣರಾಗಿದ್ದು, ಶೇ. 87.81 ಫಲಿತಾಂಶ ಬಂದಿದೆ.ಅನುದಾನಿತ ಶಾಲೆಗಳು, ಹಾಜರಾದ 734 ವಿದ್ಯಾರ್ಥಿಗಳಲ್ಲಿ 639 ಮಂದಿ ಉತ್ತೀರ್ಣರಾಗಿದ್ದು, ಶೇ. 87.6 ಸಾಧನೆಯಾಗಿದೆ.
ಅನುದಾನರಹಿತ ಶಾಲೆಗಳು, ಹಾಜರಾದ 1401 ವಿದ್ಯಾರ್ಥಿಗಳಲ್ಲಿ 1240 ಮಂದಿ ಉತ್ತೀರ್ಣರಾಗಿದ್ದು, ಶೇ. 88.51 ರಷ್ಟು ಫಲಿತಾಂಶ ಬಂದಿದೆ. ಒಟ್ಟಾರೆಯಾಗಿ ತಾಲೂಕಿನ 5097 ವಿದ್ಯಾರ್ಥಿಗಳ ಪೈಕಿ 4480 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ತಿಳಿಸಿದ್ದಾರೆ.

ನೂರಕ್ಕೆ ನೂರು ಫಲಿತಾಂಶ ಪಡೆದ ಶಾಲೆಗಳು
ತಾಲೂಕಿನ ಒಟ್ಟು 23 ಶಾಲೆಗಳು ಶೇ. 100 ರಷ್ಟು ಫಲಿತಾಂಶ ದಾಖಲಿಸಿವೆ. ಅವುಗಳಲ್ಲಿ ಸರ್ಕಾರಿ ಆದರ್ಶ ವಿದ್ಯಾಲಯ ಚಿತ್ತಾಪುರ, ಆಲ್ ಅಮೀನ್ ಉರ್ದು ಪ್ರೌಢ ಶಾಲೆ ವಾಡಿ, ಬೆಥನಿ ಶಾಲೆ, ಅಂಬೇಡ್ಕರ್ ಶಾಲೆ, ಕಂದಗೋಳ, ದಂಡೋತಿ, ಹೆಬ್ಬಾಳ, ನಾಲವಾರ, ಚಿನಚೋಳಿ ಎಚ್, ಶೆಳ್ಳಗಿಯ ಸರ್ಕಾರಿ ಶಾಲೆಗಳು, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳು (ಗುಂಡಗುರ್ತಿ, ವಾಡಿ), ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಹಾಗೂ ವಿದ್ಯಾನಿಕೇತನ ಪ್ರೌಢ ಶಾಲೆ ಪ್ರಮುಖವಾಗಿವೆ.

ತಾಲೂಕಿನ ಟಾಪ್ 10 ಪ್ರತಿಭಾವಂತ ವಿದ್ಯಾರ್ಥಿಗಳಾದ ಹೆಬ್ಬಾಳದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶ್ವೇತಾ (619) ಅತಿ ಹೆಚ್ಚು ಅಂಕ ಗಳಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಉಳಿದಂತೆ ಸುಮಂತ್ (614), ನಿವೇದಿತಾ ನಂದಾ (612), ಅಕ್ಷತಾ (612), ಚೈತನ್ಯ (610), ಶುಭಂ (609), ಖುಷಿ (608), ಎಂ.ಡಿ. ಅಮೀನ್ ಪಟೇಲ (608), ಶ್ರೀಲಕ್ಷ್ಮಿ (608) ಹಾಗೂ ಮದನ್ (607) ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಫಲಿತಾಂಶ ಸುಧಾರಣೆಗೆ ಕಾರಣವಾದ ಅಂಶಗಳು
"ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ. 47 ರಷ್ಟು ಫಲಿತಾಂಶ ಏರಿಕೆಯಾಗಿದೆ. ಇದಕ್ಕೆ ಪ್ರಮುಖವಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಒದಗಿಸಿದ 'ಅರಿವೆ ಗುರು' ಪುಸ್ತಕ (4 ಮಾದರಿ ಪ್ರಶ್ನೆ ಪತ್ರಿಕೆಗಳು), ಮಿಷನ್-40+, ಜಿಲ್ಲಾಧಿಕಾರಿಗಳ ಪ್ರಗತಿ ಪರಿಶೀಲನೆ ಹಾಗೂ ಸಿಇಒ ಅವರ ಮಾರ್ಗದರ್ಶನ ಕಾರಣ," ಎಂದು ಬಿಇಒ ಶಶಿಧರ ಬಿರಾದಾರ ಹೇಳಿದ್ದಾರೆ.

ಜೊತೆಗೆ ಜನವರಿ 2025 ರಿಂದ ಶನಿವಾರ ಮತ್ತು ಭಾನುವಾರ ವಿಶೇಷ ತರಗತಿ, 'ವೇಕ್ ಅಪ್ ಕಾಲ್', ಮಕ್ಕಳ ಮನೆ ಭೇಟಿ, ಡಯಟ್ ತಂಡದ ದತ್ತು ಯೋಜನೆ ಹಾಗೂ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ನೀಡಿದ ವಿಶೇಷ ಆದ್ಯತೆ ಈ ಯಶಸ್ಸಿಗೆ ನಾಂದಿ ಹಾಡಿದೆ. ಮುಂದಿನ ವರ್ಷಗಳಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡಲು ಈಗಿನಿಂದಲೇ ಯೋಜನೆ ರೂಪಿಸಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೊಗಲಾ - ರಾಜೇಶ್ರೀ ಸಿಮೆಂಟ್ ಕಂಪನಿ ರಸ್ತೆ ನಿರ್ಮಾಣಕ್ಕೆ ಆಗ್ರಹ.

​ಚಿತ್ತಾಪುರ: ತಾಲೂಕಿನ ಮೊಗಲಾ ಗ್ರಾಮದಿಂದ ಕೇವಲ 3 ಕಿ.ಮೀ ದೂರದಲ್ಲಿರುವ ರಾಜೇಶ್ರೀ ಸಿಮೆಂಟ್ ಕಂಪನಿ (ಮಳಖೇಡ) ಗೇಟ್‌ವರೆಗೆ ಸಮರ್ಪಕ ರಸ್ತೆ ನಿರ್ಮಾಣ ಮಾಡದ ಆಡಳಿತ ಮಂಡಳಿ ಹಾಗೂ ಜನಪ್ರತಿನಿಧಿಗಳ ಧೋರಣೆ ಖಂಡಿಸಿ ಗ್ರಾಮದ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ಹಲವು ವರ್ಷಗಳ ಹೋರಾಟಕ್ಕೆ ಬೆಲೆ ಇಲ್ಲವೇ?
ಕಳೆದ ಮೂರ್ನಾಲ್ಕು ವರ್ಷಗಳಿಂದ ಈ ರಸ್ತೆಗಾಗಿ ಸಚಿವರಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮಸ್ಥರ ಈ ನ್ಯಾಯಸಮ್ಮತ ಬೇಡಿಕೆಯನ್ನು ಅಧಿಕಾರಿಗಳು ಮತ್ತು ರಾಜೇಶ್ರೀ ಸಿಮೆಂಟ್ ಕಂಪನಿ ಮ್ಯಾನೇಜ್‌ಮೆಂಟ್ ಕಸದ ಬುಟ್ಟಿಗೆ ಹಾಕುತ್ತಿವೆ ಎಂದು ಮುಖಂಡರಾದ ವೀರಭದ್ರಪ್ಪ ಇವಣಿ ಮತ್ತು ದೇವಿಂದ್ರಪ್ಪ ಅಲ್ಲೂರ ಅವರು ನೇರವಾಗಿ ಆರೋಪಿಸಿದ್ದಾರೆ.

​ಸಂಕಷ್ಟದಲ್ಲಿ ರೈತರು ಮತ್ತು ಕಾರ್ಮಿಕರು
​ರಸ್ತೆ ಇಲ್ಲದ ಕಾರಣ ಗ್ರಾಮಸ್ಥರು ಪಡುತ್ತಿರುವ ಪಾಡು ವರ್ಣನಾತೀತವಾಗಿದೆ. ರಸ್ತೆ ಸರಿ ಇಲ್ಲದ ಕಾರಣ ರೈತರು ತಮ್ಮ ಹೊಲಗಳಿಗೆ ಹೋಗಲು ಹಾಗೂ ಬೆಳೆಗಳನ್ನು ಸಾಗಿಸಲು ಹರಸಾಹಸ ಪಡುವಂತಾಗಿದೆ. ಪ್ರತಿದಿನ ಕಂಪನಿಗೆ ಕೆಲಸಕ್ಕೆ ಹೋಗುವ ನೌಕರರು ಕೆಸರು ಮತ್ತು ಹಳ್ಳ-ಕೊಳ್ಳಗಳಿಂದ ಕೂಡಿದ ಹಾದಿಯಲ್ಲೇ ಜೀವ ಕೈಯಲ್ಲಿ ಹಿಡಿದು ಸಂಚರಿಸುತ್ತಿದ್ದಾರೆ. ಈ ರಸ್ತೆ ನಿರ್ಮಾಣವಾದರೆ ಸೇಡಂ ಕ್ಷೇತ್ರಕ್ಕೆ ಇರುವ ಅಂತರ ಕೇವಲ 10-12 ಕಿ.ಮೀ ಗೆ ಇಳಿಯಲಿದ್ದು, ಸಾರಿಗೆ ವ್ಯವಸ್ಥೆ ಸುಗಮವಾಗಲಿದೆ. ಆದರೆ ಕಂಪನಿಯ ಹಠಮಾರಿ ಧೋರಣೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ.


​"ಗ್ರಾಮದ ಪಕ್ಕದಲ್ಲೇ ಕಂಪನಿ ಇದ್ದರೂ ಅಭಿವೃದ್ಧಿಗೆ ಕಿಂಚಿತ್ತೂ ಸಹಕಾರ ನೀಡುತ್ತಿಲ್ಲ. ಕೇವಲ 3 ಕಿ.ಮೀ ರಸ್ತೆ ಮಾಡಲು ವರ್ಷಗಟ್ಟಲೆ ಸತಾಯಿಸುತ್ತಿರುವುದು ಸರಿಯಲ್ಲ. ಕಂಪನಿ ಮತ್ತು ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಗ್ರಾಮಸ್ಥರೆಲ್ಲ ಸೇರಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ."

— ವೀರಭದ್ರಪ್ಪ ಇವಣಿ ಹಾಗೂ ದೇವಿಂದ್ರಪ್ಪ

 
ಸ್ಥಳೀಯ ಸಂಪನ್ಮೂಲ ಬಳಸಿಕೊಳ್ಳುವ ರಾಜೇಶ್ರೀ ಸಿಮೆಂಟ್ ಕಂಪನಿ, ಸ್ಥಳೀಯರ ಮೂಲಭೂತ ಸೌಕರ್ಯಗಳ ಬಗ್ಗೆ ಮೌನ ವಹಿಸಿರುವುದು ಜನರಲ್ಲಿ ಆಕ್ರೋಶ ಮೂಡಿಸಿದೆ. ತಕ್ಷಣವೇ ಮೊಗಲಾದಿಂದ ಕಂಪನಿ ಗೇಟ್‌ವರೆಗೆ ಸುಸಜ್ಜಿತ ರಸ್ತೆ ನಿರ್ಮಿಸಿಕೊಡಬೇಕು, ಇಲ್ಲವಾದಲ್ಲಿ ಪ್ರತಿಭಟನೆಯ ಬಿಸಿ ಎದುರಿಸಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

ಅಂಬೇಡ್ಕರ್ ವಿಚಾರಧಾರೆ ಜಗತ್ತಿನ ಶೋಷಿತರ ಏಳಿಗೆಯ ದಾರಿದೀಪ: ಸುರೇಶ್ ಮೆಂಗನ್.

ಚಿತ್ತಾಪುರ: "ಪ್ರಬುದ್ಧ ಭಾರತ ನಿರ್ಮಾಣವಾಗಲು ಡಾ. ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಹೇಗೆ ಭದ್ರ ಬುನಾದಿಯಾಗಿದೆಯೋ, ಅದೇ ರೀತಿ ಅವರ ಉದಾತ್ತ ವಿಚಾರಧಾರೆಯು ಇಡೀ ಜಗತ್ತಿನ ಶೋಷಿತ ಸಮುದಾಯಗಳ ಏಳಿಗೆಗೆ ದಾರಿದೀಪವಾಗಿದೆ," ಎಂದು ದಲಿತ ಹಿರಿಯ ಮುಖಂಡ ಸುರೇಶ್ ಮೆಂಗನ್ ಅಭಿಪ್ರಾಯಪಟ್ಟರು.

ಪಟ್ಟಣದ ಬಜಾಜ್ ಮಿನಿ ಸಭಾಂಗಣದಲ್ಲಿ ಶನಿವಾರ ದಲಿತ ಸಂಘರ್ಷ ಸಮಿತಿ (ಬಿ.ಕೃಷ್ಣಪ್ಪ ಬಣ) ಹಾಗೂ ಕರ್ನಾಟಕ ರಾಜ್ಯ ಕಾರ್ಮಿಕ ಸಂಘರ್ಷ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರನ್ನು ಸ್ಮರಿಸಿದ ಮೆಂಗನ್ ಅವರು, "ಭಾರತದ ಸಂವಿಧಾನ ಶಿಲ್ಪಿ ಕೇವಲ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ. ಅವರು ಅಸ್ಪೃಶ್ಯತೆ ನಿವಾರಣೆ, ಸಾಮಾಜಿಕ ಸಮಾನತೆ ಮತ್ತು ಶೋಷಿತರ ಹಕ್ಕುಗಳಿಗಾಗಿ ಹೋರಾಡಿದ ಮಹಾನ್ ಮಾನವತಾವಾದಿ. ಅವರ ತತ್ವಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ನಿಜವಾದ ಬದಲಾವಣೆ ಸಾಧ್ಯ," ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡೆಕ್ಕನ್ ಬಿಇಡಿ ಕಾಲೇಜಿನ ಉಪನ್ಯಾಸಕ ಡಾ. ಅನೀಲಕುಮಾರ ತೆಂಗಳಿ ಮಾತನಾಡಿ, ಇಂದಿನ ಯುವ ಪೀಳಿಗೆಯ ವೈಚಾರಿಕತೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದರು.

"ಇಂದಿನವರಿಗೆ ಬರವಣಿಗೆಯ ಅಂಬೇಡ್ಕರ್ ಬೇಕಾಗಿಲ್ಲ, ಮೆರವಣಿಗೆಯ ಅಂಬೇಡ್ಕರ್ ಬೇಕಾಗಿದ್ದಾರೆ. ಪುಸ್ತಕದ ಅಂಬೇಡ್ಕರ್ ಅವರಿಗಿಂತ ಪುತ್ತಳಿಯ ಅಂಬೇಡ್ಕರ್ ಮೇಲೆ ಹೆಚ್ಚು ಮೋಹ ಬೆಳೆಯುತ್ತಿದೆ. ಆದರೆ, ಸಂವಿಧಾನದ ಅಡಿಯಲ್ಲಿ ನಮಗೆ ಸಿಕ್ಕಿರುವ ಸಮಾನತೆ ಮತ್ತು ಅವಕಾಶಗಳನ್ನು ಬಳಸಿಕೊಂಡು ಜ್ಞಾನವಂತರಾಗುವುದು ಇಂದಿನ ಅಗತ್ಯ," ಎಂದು ಕಿವಿಮಾತು ಹೇಳಿದರು.

ಇಂದಿಗೂ ಜಾತಿ ವ್ಯವಸ್ಥೆ ಮತ್ತು ಶೋಷಣೆ ಪೂರ್ಣವಾಗಿ ನಿಂತಿಲ್ಲ, ಇದನ್ನು ಎದುರಿಸಲು ಅಂಬೇಡ್ಕರ್ ಅವರ ಬೌದ್ಧಿಕ ಚಿಂತನೆಗಳೇ ನಮಗೆ ಅಸ್ತ್ರವಾಗಬೇಕು ಎಂದು ಅವರು ತಿಳಿಸಿದರು.

ಅಣದೂರದ ಭಂತೆ ದಮಾನಂದ ಮಹಾತರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಡಿಎಸ್‌ಎಸ್ ಮುಖಂಡ ಜಗದೀಶ್ ಸಾಗರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ಎಎಪಿ ಕಾರ್ಯಾಧ್ಯಕ್ಷ ಸೀತಾರಾಮ ಗುಂಡಪ್ಪ ಮೆರವಣಿಗೆಗೆ ಚಾಲನೆ ನೀಡಿದರು. ಡಿಎಸ್ಎಸ್ ಸಂಘಟನಾ ಸಂಚಾಲಕ ಭರತ್ ಧನ್ನಾ ಸಂವಿಧಾನದ ಪೀಠಿಕೆ ಪಠಿಸಿದರು.

ಎಎಪಿ ಮುಖಂಡರಾದ ದರ್ಶನ ಜೈನ, ಸಂಚಿತ್ ಸಹಾನಿ, ಅರ್ಜುನ್ ಹಲಗಿಗೌಡ, ಉಷಾ ಬೆಂಗಳೂರು, ರಾಘವೇಂದ್ರ ಚಿಂಚನಸೂರ, ಅಶೋಕ ಮಲ್ಕಪಗೋಳ್, ಕೀರಣ್ ರಾಠೋಡ, ಎಂ.ಎಂ.ಜಾಗೀರದಾರ್, ನ್ಯಾಯವಾದಿ ಎಸ್.ಪಿ.ಸಾತನೂರಕರ್, ಪರಮೇಶ್ವರ ಝಳಕಿ, ಮಲ್ಲಿಕಾರ್ಜುನ ಪೂಜಾರಿ ಸೇರಿದಂತೆ ಸಂಘಟನೆಯ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.ನರಸಪ್ಪ ಚಿನ್ನಾಕಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

ಶುಕ್ರವಾರ, ಏಪ್ರಿಲ್ 24, 2026

ಗುರು ಇಂಡೇನ್ ಗ್ಯಾಸ್ ಏಜೆನ್ಸಿ ಅವ್ಯವಸ್ಥೆ; ಗ್ರಾಹಕರ ಆಕ್ರೋಶ.

ಚಿತ್ತಾಪುರ: ಪಟ್ಟಣದ ಗುರು ಇಂಡೇನ್ ಗ್ಯಾಸ್ ಏಜೆನ್ಸಿಯ ಕಳಪೆ ಸೇವೆ ಹಾಗೂ ಸಿಬ್ಬಂದಿಗಳ ಬೇಜವಾಬ್ದಾರಿತನದ ವಿರುದ್ಧ ಗ್ರಾಹಕರು ಬುಧವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಗ್ಯಾಸ್ ಬುಕ್ಕಿಂಗ್ ಮಾಡಿ 15 ದಿನ ಕಳೆದರೂ ಸಿಲಿಂಡರ್ ಪೂರೈಕೆಯಾಗದ ಹಿನ್ನೆಲೆಯಲ್ಲಿ, ಸಾರ್ವಜನಿಕರು ದಿನವಿಡೀ ಗೋಡೌನ್ ಮುಂದೆ ಕಾದು ಪರದಾಡುವಂತಾಯಿತು.

ಪಟ್ಟಣದ ಒಂಟಿ ಕಮಾನ್ ಹತ್ತಿರವಿರುವ ಗ್ಯಾಸ್ ಗೋಡೌನ್ ಮುಂದೆ ಬೆಳಿಗ್ಗೆಯಿಂದಲೇ ನೂರಾರು ಗ್ರಾಹಕರು ಖಾಲಿ ಸಿಲಿಂಡರ್‌ಗಳೊಂದಿಗೆ ಜಮಾಯಿಸಿದ್ದರು. 43 ಡಿಗ್ರಿ ಸುಡುವ ಬಿಸಿಲನ್ನೂ ಲೆಕ್ಕಿಸದೆ, ಹಣಿಕೆರಾ ತಾಂಡಾ ಹಾಗೂ ಭಂಕಲಗಿ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಿಂದ ಬಂದ ಜನರು ರಾತ್ರಿಯಾದರೂ ಸಿಲಿಂಡರ್ ಸಿಗದೆ ಪರದಾಡಿದರು.

"ನಾನು ದೃಷ್ಟಿಹೀನನಾಗಿದ್ದು, ಬೆಳಿಗ್ಗೆ 10 ಗಂಟೆಯಿಂದ ಕಾಯುತ್ತಿದ್ದೇನೆ. ಟೋಕನ್ ನೀಡಿ ಮಧ್ಯಾಹ್ನ ಬರುತ್ತದೆ ಎಂದು ಹೇಳಿದವರು ಈಗ ರಾತ್ರಿಯಾದರೂ ವಿತರಿಸಿಲ್ಲ. ಇಷ್ಟು ಹೊತ್ತಿನಲ್ಲಿ ಖಾಲಿ ಸಿಲಿಂಡರ್ ಹಿಡಿದು ಊರಿಗೆ ಹೇಗೆ ಹೋಗಲಿ?" ಎಂದು ಭಂಕಲಗಿಯ ನಿವಾಸಿ ಶಾಂತಕುಮಾರ್ ರೆಡ್ಡಿ ಕಣ್ಣೀರು ಹಾಕಿದರು.

ಏಜೆನ್ಸಿಯ ಸಿಬ್ಬಂದಿಗಳು ಫೋನ್ ಕರೆ ಸ್ವೀಕರಿಸುತ್ತಿಲ್ಲ, ಕೇಳಲು ಹೋದರೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ಗ್ರಾಹಕರು ಕರೆ ಮಾಡಿದರೆ ಏಜೆನ್ಸಿಯ ಫೋನ್‌ಗಳು ಸ್ವಿಚ್ ಆಫ್ ಇರುತ್ತವೆ, ಮನೆಗೆ ತಲುಪಿಸುವ ಬದಲಿಗೆ "ನಾವೇ ನಿಮ್ಮ ಮನೆಗೆ ಬರಬೇಕೇ?" ಎಂಬ ಉಡಾಫೆಯ ಉತ್ತರ ನೀಡುತ್ತಿದ್ದಾರೆ ಎಂದು ಗ್ರಾಹಕರು ದೂರಿದ್ದಾರೆ, ಸಮಸ್ಯೆ ಬಗೆಹರಿಯದಿದ್ದರೆ ಏಜೆನ್ಸಿ ಮುಂದೆ ಕಟ್ಟಿಗೆ ತಂದು ಅಡುಗೆ ಮಾಡುವ ಮೂಲಕ ಪ್ರತಿಭಟನೆ ನಡೆಸುವುದಾಗಿ ಜನರು ಎಚ್ಚರಿಸಿದ್ದಾರೆ.

ಹಿಂದೆ ಯುದ್ಧದಂತಹ ಕಠಿಣ ಕಾಲದಲ್ಲೂ ಮನೆಬಾಗಿಲಿಗೆ ಸಿಲಿಂಡರ್ ತಲುಪಿಸುತ್ತಿದ್ದ ಏಜೆನ್ಸಿ, ಈಗ ಸಾಮಾನ್ಯ ದಿನಗಳಲ್ಲೇ ವಿತರಣೆಯಲ್ಲಿ ವಿಫಲವಾಗಿದೆ ಎಂದು ಧಾರನಾಯಕ ಪಿ. ರಾಥೋಡ್ ಅಸಮಾಧಾನ ವ್ಯಕ್ತಪಡಿಸಿದರು.

ಈ ಕೂಡಲೇ ಕ್ಷೇತ್ರದ ಶಾಸಕರಾದ ಗುರು ಇಂಡೇನ್ ಗ್ಯಾಸ್ ಏಜೆನ್ಸಿ ಅವ್ಯವಸ್ಥೆ; ಗ್ರಾಹಕರ ಆಕ್ರೋಶ. ಅವರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮಧ್ಯಪ್ರವೇಶಿಸಿ, ಗುರು ಇಂಡೇನ್ ಗ್ಯಾಸ್ ಏಜೆನ್ಸಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮನೆಮನೆಗೆ ಸರಿಯಾದ ವಿತರಣೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಚಿತ್ತಾಪುರಕ್ಕೆ ಸುಮಂತ ಮದಗುಂಟಿ ಪ್ರಥಮ:ಸ್ವಾಮಿ ವಿವೇಕಾನಂದ ಸಂಸ್ಥೆಗೆ ಸತತ 8ನೇ ಬಾರಿ ನೂರಕ್ಕೆ ನೂರು ಫಲಿತಾಂಶ.

ಚಿತ್ತಾಪುರ: ಗುಣಮಟ್ಟದ ಶಿಕ್ಷಣ ಮತ್ತು ಶಿಸ್ತಿನ ನೆಲೆಬೀಡಾಗಿರುವ ಇಲ್ಲಿನ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಸಂಚಾಲಿತ ವಿದ್ಯಾನಿಕೇತನ ಪ್ರೌಢ ಶಾಲೆಯು ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಶಾಲೆಯು ಸತತ 8ನೇ ವರ್ಷವೂ ಶೇ. 100ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಜಿಲ್ಲೆಯ ಶೈಕ್ಷಣಿಕ ವಲಯದಲ್ಲಿ ತನ್ನ ವಿಜಯಯಾತ್ರೆಯನ್ನು ಮುಂದುವರೆಸಿದೆ.

ಶಾಲೆಯ ವಿದ್ಯಾರ್ಥಿ ಸುಮಂತ ಮದಗುಂಟಿ ಒಟ್ಟು 625 ಅಂಕಗಳಿಗೆ 614 ಅಂಕಗಳನ್ನು (ಶೇ. 98.24) ಪಡೆಯುವ ಮೂಲಕ ಇಡೀ ಚಿತ್ತಾಪುರ ತಾಲೂಕಿಗೆ ಪ್ರಥಮ ಸ್ಥಾನ ಅಲಂಕರಿಸಿದ್ದಾನೆ. ಗ್ರಾಮೀಣ ಭಾಗದ ಈ ವಿದ್ಯಾರ್ಥಿಯ ಸಾಧನೆಗೆ ಇಡೀ ತಾಲೂಕು ಹೆಮ್ಮೆ ವ್ಯಕ್ತಪಡಿಸಿದೆ.

ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 68 ವಿದ್ಯಾರ್ಥಿಗಳೂ ಯಶಸ್ವಿಯಾಗಿ ಉತ್ತೀರ್ಣರಾಗಿದ್ದು, ಫಲಿತಾಂಶದ ವಿವರದಲ್ಲಿ ಅತ್ಯುನ್ನತ ಶ್ರೇಣಿ (Distinction): 40 ವಿದ್ಯಾರ್ಥಿಗಳು,ಪ್ರಥಮ ಶ್ರೇಣಿ (First Class): 26 ವಿದ್ಯಾರ್ಥಿಗಳು,ಒಟ್ಟಾರೆ ಶೇ. 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿರುವುದು ಶಾಲೆಯ ಬೋಧನಾ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ.ಸತತ 8 ವರ್ಷಗಳಿಂದ 100% ಫಲಿತಾಂಶ ಕಾಯ್ದುಕೊಳ್ಳುವುದು ದೊಡ್ಡ ಮೈಲಿಗಲ್ಲಾಗಿದೆ. ಈ ಯಶಸ್ಸಿನ ಹಿಂದೆ ಶಾಲೆಯ ಮುಖ್ಯ ಗುರುಗಳಾದ ರಮೇಶ ಯಾದವಾಡ ಹಾಗೂ ಬೋಧಕ ಸಿಬ್ಬಂದಿಯ ಹಗಲಿರುಳಿನ ಶ್ರಮವಿದೆ. ವಿಶೇಷ ತರಗತಿಗಳು ಮತ್ತು ವೈಯಕ್ತಿಕ ಮಾರ್ಗದರ್ಶನ ಇಂದು ಶಾಲೆಯನ್ನು ಜಿಲ್ಲೆಯಲ್ಲೇ ಮಾದರಿಯಾಗಿಸಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀನಿವಾಸ ಪೇಂದು ಹಾಗೂ ಮಂಡಳಿಯ ಸರ್ವ ಸದಸ್ಯರು ಸಂತಸ ವ್ಯಕ್ತಪಡಿಸಿದ್ದಾರೆ. "ನಮ್ಮ ಶಾಲೆಯು ಕೇವಲ ಅಂಕಗಳಿಕೆಯನ್ನಷ್ಟೇ ಅಲ್ಲದೆ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ. ಇದು ಶಿಕ್ಷಕರ ಮತ್ತು ಪೋಷಕರ ಸಹಕಾರಕ್ಕೆ ಸಂದ ಜಯ," ಎಂದು ಅವರು ತಿಳಿಸಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಮತ್ತು ಶಾಲಾ ತಂಡವನ್ನು ಪಟ್ಟಣದ ಗಣ್ಯರು ಹಾಗೂ ಸಾರ್ವಜನಿಕರು ಅಭಿನಂದಿಸಿದ್ದಾರೆ.

ಅದ್ಧೂರಿ ‘ಶ್ರೀ ಭಗೀರಥ ಮಹರ್ಷಿ ಜಯಂತಿ’ ಆಚರಣೆ.

​ಚಿತ್ತಾಪುರ: ಪಟ್ಟಣದ ಪ್ರಜಾ ಸೌಧದಲ್ಲಿ ಗುರುವಾರ ಮಾನ್ಯ ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ಶ್ರೀ ಭಗೀರಥ ಮಹರ್ಷಿ ಅವರ ಜಯಂತಿಯನ್ನು ಅತ್ಯಂತ ಸಡಗರ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು.

​ಕಾರ್ಯಕ್ರಮದ ಕುರಿತು ಪ್ರಮುಖರಾದ ಅಂಬರೀಶ ಸುಲೇಗಾಂವ ಅವರು ಪ್ರಾಸ್ತವಿಕವಾಗಿ ಮಾತನಾಡಿ, "ತಮ್ಮ ಕಠಿಣ ತಪಸ್ಸಿನ ಮೂಲಕ ಗಂಗೆಯನ್ನು ಭೂಮಿಗೆ ತಂದ ಭಗೀರಥ ಮಹರ್ಷಿಗಳು ದೃಢ ಸಂಕಲ್ಪದ ಸಂಕೇತ. ಅವರ ಜೀವನ ಮತ್ತು ಸಾಧನೆ ಇಂದಿನ ಪೀಳಿಗೆಗೆ ಮಾದರಿಯಾಗಿದೆ," ಎಂದು ತಿಳಿಸಿದರು.

​ಅಧ್ಯಕ್ಷತೆಯ ನುಡಿಗಳನ್ನಾಡಿದ ತಹಸೀಲ್ದಾರ ನಾಗಯ್ಯ ಹಿರೇಮಠ ಮಹರ್ಷಿಗಳ ಜೀವನ ಸಂದೇಶವನ್ನು ಸ್ಮರಿಸುತ್ತಾ, ಸಮಾಜದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬರ ಪಾಲ್ಗೊಳ್ಳುವಿಕೆ ಅತ್ಯಗತ್ಯ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಹಳ್ಳಿ, ಪ್ರಮುಖ ಮುಖಂಡರಾದ ಲಕ್ಷ್ಮಣ ಟಳ್ಳಿ, ಮಲ್ಲಿಕಾರ್ಜುನ ಉಪ್ಪಾರ, ಗೋವಿಂದಪ್ಪ ಜಡಿ, ಭೀಮರಾಯ ಉಪ್ಪಾರ, ಹಾಗೂ ಶರಣಪ್ಪ ಬೀಮನಹಳ್ಳಿ ಸೇರಿದಂತೆ ಸಮಾಜದ ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಗುರುವಾರ, ಏಪ್ರಿಲ್ 23, 2026

ನಿಗಮದ ಅಧ್ಯಕ್ಷರಾಗಿ ಡಾ. ಶ್ರೀನಿವಾಸ್ ವೇಲು ಪದಗ್ರಹಣ: ಸಿಎಂಗೆ ಅಭಿನಂದನೆ ಸಲ್ಲಿಸಿದ ಸಮುದಾಯದ ಮುಖಂಡರು

ಬೆಂಗಳೂರು: ಕರ್ನಾಟಕ ರಾಜ್ಯ ಕುಂಬಾರ ಜನಾಂಗ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಡಾ. ಶ್ರೀನಿವಾಸ್ ವೇಲು ಅವರನ್ನು ನೇಮಕ ಮಾಡಿದ ಹಿನ್ನೆಲೆಯಲ್ಲಿ, ಸಮಸ್ತ ಕುಂಬಾರ ಸಮುದಾಯದ ಪರವಾಗಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬೆಂಗಳೂರಿನ ಅವರ ಅಧಿಕೃತ ಗೃಹ ಕಚೇರಿ 'ಕಾವೇರಿ'ಯಲ್ಲಿ ಭೇಟಿ ಮಾಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಮಾನ್ಯ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿಯವರು ಉಪಸ್ಥಿತರಿದ್ದು, ಸಮುದಾಯದ ಮುಖಂಡರೊಂದಿಗೆ ಶುಭ ಕೋರಿದರು. ತದನಂತರ ಸಂಜೆ ಬೆಂಗಳೂರಿನ ಡಿ. ದೇವರಾಜ ಅರಸು ಭವನದಲ್ಲಿ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕುಂಬಾರ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಆರ್. ಶ್ರೀನಿವಾಸ್, ಕೆ.ಎಸ್.ಆರ್.ಟಿ.ಸಿ ನಿರ್ದೇಶಕಿ ಗಾಯಿತ್ರಿ (IAS), ಅಖಿಲ ಭಾರತ ಕರ್ನಾಟಕ ಕುಂಬಾರ ಮಹಾಸಭಾದ ಅಧ್ಯಕ್ಷರಾದ ಶಿವಕುಮಾರ ಚೌಡ ಶೆಟ್ಟಿ, ಗೌರವಾಧ್ಯಕ್ಷರಾದ ಗುರುರಾಜ್, ಮಾಜಿ ಹೆಚ್ಚುವರಿ ಅಡ್ವಕೇಟ್ ಜನರಲ್ ದೇವದಾಸ್, ವಕೀಲರಾದ ಅನುಸೂಯಾ, ಡಾ. ಹೇಮಾವತಿ ಶ್ರೀನಿವಾಸ್ ವೇಲು ಹಾಗೂ ಸಮುದಾಯದ ಮುಖಂಡರಾದ ಸಂಗಮೇಶ, ಚಿಕ್ಕ ವೀರಯ್ಯ ಟಿ.ಎನ್, ವಿಠಲ್ ಶಂಕರ್ ಸೇರಿದಂತೆ ಹಲವು ಹಿತೈಷಿಗಳು ಭಾಗವಹಿಸಿದ್ದರು.

"ಅನಿವಾರ್ಯ ಕಾರಣಗಳಿಂದಾಗಿ ಬೆಂಗಳೂರಿನಲ್ಲಿ ನಡೆದ ನಮ್ಮ ಹೆಮ್ಮೆಯ ಸಮುದಾಯದ ನಾಯಕರಾದ ಡಾ. ಶ್ರೀನಿವಾಸ್ ವೇಲು ರವರ ಪದಗ್ರಹಣ ಕಾರ್ಯಕ್ರಮದಲ್ಲಿ ಖುದ್ದಾಗಿ ಭಾಗವಹಿಸಲು ಸಾಧ್ಯವಾಗಿಲ್ಲ. ನಮ್ಮ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಡಾ. ಶ್ರೀನಿವಾಸ್ ವೇಲು ರವರಿಗೆ ಈ ಜವಾಬ್ದಾರಿ ಸಿಕ್ಕಿರುವುದು ಅತ್ಯಂತ ಸಂತೋಷದ ವಿಷಯ. ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಅವರ ನೇತೃತ್ವದಲ್ಲಿ ಕುಂಬಾರ ನಿಗಮವು ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಂತಾಗಲಿ ಎಂದು ಆಶಿಸುತ್ತೇನೆ. ಈ ನೇಮಕಾತಿ ಮಾಡಿದ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಬೆಂಬಲವಾಗಿ ನಿಂತ ಸಾರಿಗೆ ಸಚಿವರಿಗೆ ಧನ್ಯವಾದಗಳು."

ಜಗದೇವ ಎಸ್. ಕುಂಬಾರ,
ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ,ಅಖಿಲ ಭಾರತ ಕುಂಬಾರ ಮಹಾಸಭಾ ಬೆಂಗಳೂರ.

ಬುಧವಾರ, ಏಪ್ರಿಲ್ 22, 2026

ಸಮಾಜಕ್ಕಾಗಿ ಬದುಕಿದಾಗ ಮಾತ್ರ ಜೀವನ ಸಾರ್ಥಕ: ಹಿರೇಮಠ.

ಚಿತ್ತಾಪುರ: ನಮ್ಮ ಜೀವನವನ್ನು ಕೇವಲ ಸ್ವಂತಕ್ಕಾಗಿ ಸೀಮಿತಗೊಳಿಸದೆ ಸಮಾಜಕ್ಕಾಗಿ ಮುಡಿಪಾಗಿಟ್ಟಾಗ ಮಾತ್ರ ಅದು ಸಾರ್ಥಕತೆ ಪಡೆಯುತ್ತದೆ ಎಂದು ತಹಸೀಲ್ದಾ‌ರ್ ನಾಗಯ್ಯ ಹಿರೇಮಠ ಅವರು ಅಭಿಪ್ರಾಯಪಟ್ಟರು.

ಪಟ್ಟಣದ ಪ್ರಜಾ ಸೌಧದ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು "ನಾವು ಪ್ರತಿನಿತ್ಯ ಸ್ವಾರ್ಥಕ್ಕಾಗಿ ಬದುಕುತ್ತಿದ್ದೇವೆ. ಆದರೆ ಹಿಂದಿನ ಮಹಾಪುರುಷರು ಸಂಸಾರ ಮತ್ತು ಸಂಬಂಧಗಳನ್ನು ಬದಿಗಿಟ್ಟು ಸಮಾಜ ಹಾಗೂ ಧರ್ಮದ ಉಳಿವಿಗಾಗಿ ಶ್ರಮಿಸಿದ್ದಾರೆ. ತಮ್ಮ ಜೀವನವನ್ನೇ ಧಾರೆ ಎರೆದ ಕಾರಣಕ್ಕೆ ಇಂದು ನಾವು ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸುತ್ತಿದ್ದೇವೆ. ಅವರ ತತ್ವ ಸಿದ್ಧಾಂತಗಳನ್ನು ಪಾಲಿಸುವ ಮೂಲಕ ನಾವು ಕೂಡ ಸಮಾಜಮುಖಿಯಾಗಿ ಬದುಕಬೇಕು," ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕುಮಾರಿ ಅಕ್ಷತಾ ಜಾನೀಬ್ ಅವರು ಶಂಕರಾಚಾರ್ಯರ ಜೀವನ ಚರಿತ್ರೆಯ ಕುರಿತು ಉಪನ್ಯಾಸ ನೀಡಿದರು. ವಿಪ್ರ ಸಮಾಜದ ಕೋಶಾಧ್ಯಕ್ಷ ಜಯಂತ ಮಾಲಗತ್ತಿ ಅವರು ಮಾತನಾಡಿ, ಶಂಕರಾಚಾರ್ಯರ ಕೊಡುಗೆಯನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್, ಅಶ್ವತ್ಥ ನಾರಾಯಣ ಕುಲಕರ್ಣಿ, ಉಪ ನೋಂದಣಾಧಿಕಾರಿ ಆನಂದರಾವ್ ಕುಲಕರ್ಣಿ ಸೇರಿದಂತೆ
ತಾಲೂಕು ಗೌರವ ಅಧ್ಯಕ್ಷ ದೇವಿದಾಸ್ ಕುಲಕರ್ಣಿ, ತಾಲೂಕು ಅಧ್ಯಕ್ಷರು ಗಿರೀಶ್ ಜಾನೀಬ್, ಉಪಾಧ್ಯಕ್ಷ ವಿಶ್ವನಾಥ ಅಫಜಲಪುರಕರ್, ಹಣಮೇಶ್ ಆಚಾರ್ಯ, ಭೀಮರಾವ್ ಅಫಜಲಪುರಕರ್, ಗೌತಮ್ ನಾಯಕ್, ಗೋಪಾಲ್ ಹಾಗೂ ವಿಪ್ರ ಸಮಾಜದ ಮಹಿಳಾ ಮುಖಂಡರಾದ ಸರೋಜಾ ಅಫಜಲಪುರಕರ್, ಶೃತಿ ಜಾನೀಬ್, ಸಕ್ಕುಬಾಯಿ ಕುಲಕರ್ಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಮಂಗಳವಾರ, ಏಪ್ರಿಲ್ 21, 2026

ವೀರಶೈವ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಅಡಿಗಲ್ಲು; ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ.

ಚಿತ್ತಾಪುರ: ಪಟ್ಟಣದ ಸ್ಟೇಷನ್‌ ರಸ್ತೆಯಲ್ಲಿರುವ ವೀರಶೈವ ಸಮಾಜದ ನಿವೇಶನದಲ್ಲಿ ಅಂದಾಜು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸುಸಜ್ಜಿತ ಹಾಗೂ ಹವಾನಿಯಂತ್ರಿತ (AC) ವೀರಶೈವ ಕಲ್ಯಾಣ ಮಂಟಪದ ಅಡಿಗಲ್ಲು ಸಮಾರಂಭ ಸೋಮವಾರ ಅದ್ಧೂರಿಯಾಗಿ ನೆರವೇರಿತು.

ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಶರಣಕುಮಾರ ಮೋದಿ ಅಡಿಗಲ್ಲು ನೆರವೇರಿಸಿ ಮಾತನಾಡಿ, "ಜಿಲ್ಲೆಯಲ್ಲೇ ಚಿತ್ತಾಪುರ ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ಸಂಘಟನೆ ಅತ್ಯಂತ ಬಲಿಷ್ಠವಾಗಿದೆ. ಈ ಭಾಗದಲ್ಲಿ ಸಮಾಜದ ಬಾಂಧವರಿಗಾಗಿ ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ವಿದ್ಯಾರ್ಥಿ ವಸತಿ ನಿಲಯದ ಅವಶ್ಯಕತೆ ಇತ್ತು. ಈ ಕಾರ್ಯಕ್ಕೆ ವೈಯಕ್ತಿಕವಾಗಿ ಹಾಗೂ ಜಿಲ್ಲಾ ಘಟಕದ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಲ್ಲದೆ, ಯೋಜನೆಯ ಯಶಸ್ಸಿಗೆ ಬೆನ್ನೆಲುಬಾಗಿ ನಿಲ್ಲುತ್ತೇನೆ," ಎಂದು ಭರವಸೆ ನೀಡಿದರು.

ಬಸವ ಭವನ ನಿರ್ಮಾಣ ಸಮಿತಿ ಅಧ್ಯಕ್ಷ ರಮೇಶ್ ಮರಗೋಳ ಮಾತನಾಡಿ, "ಸಮಾಜದ ಮುಖಂಡರ ಆಶಯದಂತೆ ಈ ಸುಸಜ್ಜಿತ ಕಲ್ಯಾಣ ಮಂಟಪವನ್ನು ನಿರ್ಮಿಸಲಾಗುತ್ತಿದೆ. ಇದಕ್ಕೆ ಬೇಕಾಗುವ 2 ಕೋಟಿ ರೂ. ಹಣವನ್ನು ಸಮಾಜದ ಮುಖಂಡರು ಮತ್ತು ದಾನಿಗಳಿಂದ ಸಂಗ್ರಹಿಸಲಾಗುವುದು. ಈಗಾಗಲೇ ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ ಅವರು 5 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಅನೇಕ ದಾನಿಗಳು ಸಹಾಯಕ್ಕೆ ಮುಂದೆ ಬಂದಿದ್ದು, ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ," ಎಂದರು.

ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿದ್ದ ಕಂಬಳೇಶ್ವರ ಶ್ರೀ ಸೋಮಶೇಖರ ಶಿವಾಚಾರ್ಯರು ಆಶೀರ್ವಚನ ನೀಡಿ, "ಪಟ್ಟಣದ ಹೃದಯ ಭಾಗದಲ್ಲಿ ಸಮಾಜಕ್ಕಾಗಿ ನಿವೇಶನ ಕಾಯ್ದಿರಿಸಿದ ಶಿವರಾವ್‌ ಪಾಟೀಲ ಬೆಳಗುಂಪಾ ಅವರ ಕಾರ್ಯ ಶ್ಲಾಘನೀಯ. ಸಮಾಜದ ಹಿತದೃಷ್ಟಿಯಿಂದ ರಾಜಕೀಯ ಪಕ್ಷಪಾತ ಮರೆತು ಎಲ್ಲರೂ ಒಗ್ಗೂಡಿರುವುದು ಸಂತಸದ ವಿಷಯ. ಈ ಭವನ ನಿರ್ಮಾಣವಾದ ನಂತರ ಬಡವರಿಗೂ ಕೈಗೆಟುಕುವ ದರದಲ್ಲಿ ಇದರ ಪ್ರಯೋಜನ ಸಿಗುವಂತಾಗಲಿ," ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ, ಮುಖಂಡರಾದ ವೀರಣ್ಣಗೌಡ ಪರಸರೆಡ್ಡಿ, ಶಿವಾನಂದ ಪಾಟೀಲ ಮರತೂರ, ಚಂದ್ರಶೇಖರ ಅವಂಟಿ, ಭೀಮಣ್ಣ ಸಾಲಿ ಮಾತನಾಡಿದರು.

ವೇದಿಕೆಯಲ್ಲಿ ತಾಲೂಕು ಗೌರವಾಧ್ಯಕ್ಷ ಲಿಂಗಾರೆಡ್ಡಿ ಭಾಸರೆಡ್ಡಿ, ಬಸವ ಜಯಂತಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಬೆಳಗುಂಪಾ, ಡಾ.ಪ್ರಭುರಾಜ ಕಾಂತಾ, ಸೋಮಶೇಖರ ಪಾಟೀಲ ಬೆಳಗುಂಪಾ, ರಾಜಶೇಖ‌ರ್ ತಿಮ್ಮನಾಯಕ ಸೇರಿದಂತೆ ಸಮಾಜದ ನೂರಾರು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಶಾಂತಣ್ಣ ಚಾಳೀಕಾರ ಕಾರ್ಯಕ್ರಮ ನಿರೂಪಿಸಿದರು.

ವಿದ್ಯಾರ್ಥಿನಿ ನಿಲಯಕ್ಕೆ ಅಡಿಗಲ್ಲು: ಮುಂದಿನ ವರ್ಷ ಉದ್ಘಾಟನೆ.

​ಚಿತ್ತಾಪುರ: ಪಟ್ಟಣದ ರಾವೂರ ರಸ್ತೆಯಲ್ಲಿ ಶ್ರೀ ಬಸವೇಶ್ವರ ಚಾರಿಟೇಬಲ್‌ ಟ್ರಸ್ಟ್ ವತಿಯಿಂದ ನಿರ್ಮಿಸಲಾಗುತ್ತಿರುವ ಬಸವ ಭವನ ಹಾಗೂ ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ವಸತಿ ನಿಲಯದ ಕಾಮಗಾರಿಗಳಿಗೆ ಬಸವ ಜಯಂತಿಯ ಶುಭ ದಿನದಂದು ಅಡಿಗಲ್ಲು ಹಾಕಲಾಗಿದ್ದು, ಮುಂದಿನ ವರ್ಷದೊಳಗೆ ಕಟ್ಟಡವನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ನಾಗರೆಡ್ಡಿ ಪಾಟೀಲ ಕರದಾಳ ತಿಳಿಸಿದರು.

​ಸೋಮವಾರ ಹಮ್ಮಿಕೊಂಡಿದ್ದ ಅಡಿಗಲ್ಲು ಸಮಾರಂಭದಲ್ಲಿ ಮಾತನಾಡಿದ ಅವರು, "ಸಮಾಜದ ಹಿತದೃಷ್ಟಿಯಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ಕೆ ಈಗಾಗಲೇ ಹತ್ತು ಜನ ದಾನಿಗಳು ತಲಾ ಒಂದು ಕೊಠಡಿಯ ನಿರ್ಮಾಣಕ್ಕೆ ಧನಸಹಾಯ ನೀಡಲು ಮುಂದೆ ಬಂದಿದ್ದಾರೆ. ವಚನ ನೀಡಿದಂತೆ ಆಯಾ ಕೊಠಡಿಗಳಿಗೆ ದಾನಿಗಳ ಹೆಸರನ್ನೇ ಇಡಲಾಗುವುದು. ಶೀಘ್ರದಲ್ಲೇ ದಾನಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ಆಯೋಜಿಸಲಾಗುವುದು," ಎಂದು ಮಾಹಿತಿ ನೀಡಿದರು.

​ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅಡಿಗಲ್ಲು ನೆರವೇರಿಸಿದ ಕಂಬಳೇಶ್ವರದ ಶ್ರೀ ಸೋಮಶೇಖರ ಶಿವಾಚಾರ್ಯರು ಆಶೀರ್ವಚನ ನೀಡಿ, "ಹುಟ್ಟು ಸಾವಿನ ನಡುವಿನ ಬದುಕಿನಲ್ಲಿ ಸಮಾಜಕ್ಕಾಗಿ ಉತ್ತಮ ಕಾರ್ಯ ಮಾಡುವುದು ಶ್ರೇಷ್ಠವಾದುದು. ಚಿತ್ತಾಪುರದಲ್ಲಿ ನಿರ್ಮಾಣವಾಗುತ್ತಿರುವ ಈ ಭವನ ಮತ್ತು ವಸತಿ ನಿಲಯಗಳು ಇಡೀ ಜಿಲ್ಲೆಗೆ ಮಾದರಿಯಾಗಲಿವೆ. ಸಮಾಜದ ಪ್ರತಿಯೊಬ್ಬರೂ ಈ ಕಾರ್ಯಕ್ಕೆ ಕೈಜೋಡಿಸಬೇಕು," ಎಂದು ಕರೆ ನೀಡಿದರು.

​ಕಾರ್ಯಕ್ರಮದಲ್ಲಿ ಪ್ರಮುಖರಾದ ಡಾ.ಪ್ರಭುರಾಜ ಕಾಂತಾ, ಅಣ್ಣಾರಾವ್ ಪಾಟೀಲ ಮುಡಬೂಳ, ಚಂದ್ರಶೇಖರ ಸಾತನೂರ, ಅಶೋಕ ನಿಪ್ಪಾಣಿ, ಮಲ್ಲಿಕಾರ್ಜುನರೆಡ್ಡಿ ಇಜಾರ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

​ಟ್ರಸ್ಟ್ ಕಾರ್ಯದರ್ಶಿ ನಾಗರಾಜ ಭಂಕಲಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂಬರೀಷ್ ಸುಲೇಗಾಂವ ಕಾರ್ಯಕ್ರಮ ನಿರೂಪಿಸಿದರೆ, ಅನಿಲ್ ವಡ್ಡಡಗಿ ವಂದಿಸಿದರು. ಚಂದ್ರುಗೌಡ ಬೆಳಗುಂಪಾ, ಎಸ್.ಎನ್.ಪಾಟೀಲ, ಶಾಂತಕುಮಾರ್ ಹತ್ತಿ, ಕುಂಬಾರ ಸಮಾಜದ ಅಧ್ಯಕ್ಷ ವಿಶ್ವನಾಥ ಕುಂಬಾರ, ಸೇರಿದಂತೆ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

ಯಶಸ್ವಿ ಉಚಿತ ಆರೋಗ್ಯ ತಪಾಸಣಾ ಶಿಬಿರ.

ಚಿತ್ತಾಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚಿತ್ತಾಪುರ ಹಾಗೂ ಬಸವ ಜಯಂತಿ ಉತ್ಸವ ಆಚರಣೆ ಸಮಿತಿ ವತಿಯಿಂದ 893 ನೇ ಬಸವ ಜಯಂತಿ ಉತ್ಸವದ ಅಂಗವಾಗಿ ಸೋಮವಾರ ಪಟ್ಟಣದ ಎಪಿಎಂಸಿ ಆವರಣದಲ್ಲಿ ಆಯೋಜಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು.

ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರು ಶಿಬಿರವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಸವಣ್ಣನವರ ಜಯಂತಿಯ ಅಂಗವಾಗಿ ಇಂತಹ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ. ಬಡವರು ಹಾಗೂ ಜನಸಾಮಾನ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಮೆಡಿಕೇ‌ರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಮುಖ್ಯಸ್ಥ ಡಾ.ಸುರೇಶ್ ಪಾಟೀಲ ಅವರ ಸಹಕಾರದೊಂದಿಗೆ ನಡೆದ ಈ ಶಿಬಿರದಲ್ಲಿ ಸುಮಾರು 15 ರಿಂದ 20 ನುರಿತ ವೈದ್ಯರ ತಂಡ ಭಾಗವಹಿಸಿತ್ತು. ಶಿಬಿರದಲ್ಲಿ ಲಭ್ಯವಿದ್ದ ಪ್ರಮುಖ ಸೇವೆಗಳು:

ಮೂಳೆ ತಜ್ಞರು, ಲ್ಯಾಪರೋಸ್ಕೋಪಿಕ್, ಜನರಲ್ ಮೆಡಿಸಿನ್ ಹಾಗೂ ಮಹಿಳಾ ತಜ್ಞರು. ಕೀಲು ನೋವು, ಮಕ್ಕಳ ತಜ್ಞರು, ಕಿವಿ ಪರೀಕ್ಷೆ ಹಾಗೂ ಚರ್ಮ ರೋಗ ತಪಾಸಣೆ. ಮಧುಮೇಹ (Sugar), ರಕ್ತದ ಒತ್ತಡ (BP), ಕಣ್ಣಿನ ಪರೀಕ್ಷೆ ಹಾಗೂ ಸೀಳು ತುಟಿಗಳ ತಪಾಸಣೆ. ವೈದ್ಯರ ತಂಡವು ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವುದರ ಜೊತೆಗೆ ಉಚಿತವಾಗಿ ಔಷಧಿಗಳನ್ನು ವಿತರಿಸುವ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಿತು.

ಬಸವ ಜಯಂತಿ ಸಮಿತಿ ವತಿಯಿಂದ ಶಿಬಿರಕ್ಕೆ ಬಂದ ಸಾರ್ವಜನಿಕರಿಗೆ ತಂಪಾದ ಕುಡಿಯುವ ನೀರು ಹಾಗೂ ಪ್ರಸಾದದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿತ್ತು. ನೂರಾರು ಜನರು ಶಿಬಿರದ ಲಾಭ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಜಯಂತಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಬೆಳಗುಂಪಾ, ಡಾ.ಸುರೇಶ್ ಪಾಟೀಲ, ಡಾ.ಸಂತೋಷ ಪಾಟೀಲ ಹೆಬ್ಬಾಳ, ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಗೌರವಾಧ್ಯಕ್ಷ ಲಿಂಗಾರೆಡ್ಡಿ ಭಾಸರೆಡ್ಡಿ, ಅಧ್ಯಕ್ಷ ನಾಗರಾಜ ಭಂಕಲಗಿ ಉಪಸ್ಥಿತರಿದ್ದರು.

ಪ್ರಮುಖರಾದ ಸೋಮಶೇಖರ ಪಾಟೀಲ ಬೆಳಗುಂಪಾ, ನಾಗರೆಡ್ಡಿ ಪಾಟೀಲ ಕರದಾಳ, ರಮೇಶ್ ಮರಗೋಳ, ಶಿವಾನಂದ ಪಾಟೀಲ, ವೀರಣ್ಣಗೌಡ ಪರಸರೆಡ್ಡಿ, ಭೀಮಣ್ಣ ಸಾಲಿ, ಮಲ್ಲಿಕಾರ್ಜುನ ಕಾಳಗಿ, ಕುಂಬಾರ ಸಮಾಜದ ಅಧ್ಯಕ್ಷ ವಿಶ್ವನಾಥ ಕುಂಬಾರ, ರಮೇಶ ಕಾಳನೂರ. ಸೇರಿದಂತೆ ಅನೇಕ ಮುಖಂಡರು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಭಾಗವಹಿಸಿದ್ದರು.

ಬಸವ ಜಯಂತಿ ಸಂಭ್ರಮ: 70 ಜೋಡಿ ಎತ್ತುಗಳೊಂದಿಗೆ ಅದ್ದೂರಿ ಮೆರವಣಿಗೆ.

​ಚಿತ್ತಾಪುರ: ತಾಲೂಕು ಆಡಳಿತ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಬಸವ ಜಯಂತಿ ಉತ್ಸವ ಆಚರಣೆ ಸಮಿತಿ ಸಹಯೋಗದಲ್ಲಿ ಜಗಜ್ಯೋತಿ ಬಸವೇಶ್ವರರ 893ನೇ ಜಯಂತ್ಯುತ್ಸವವನ್ನು ಸೋಮವಾರ ಪಟ್ಟಣದಲ್ಲಿ ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು.

ಪಟ್ಟಣದ ಪ್ರಜಾ ಸೌಧದಲ್ಲಿ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ವಿಶೇಷ ಪೂಜೆ ನೆರವೇರಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಸವಣ್ಣನವರ ತತ್ವಗಳು ಇಂದಿಗೂ ಸಾರ್ವಕಾಲಿಕವಾಗಿದ್ದು, ಸಮಾಜದಲ್ಲಿ ಸಮಾನತೆ ತರುವಲ್ಲಿ ಅವರ ಕೊಡುಗೆ ಅಪಾರ ಎಂದರು.

ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಾಗಿತು. ಬಸವೇಶ್ವರರ ಭಾವಚಿತ್ರದೊಂದಿಗೆ ಸುಮಾರು 70 ಜೋಡಿ ಅಲಂಕೃತ ಎತ್ತುಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದು ವಿಶೇಷ ಆಕರ್ಷಣೆಯಾಗಿತ್ತು. ಮೆರವಣಿಗೆಯುದ್ದಕ್ಕೂ ಬಸವಣ್ಣನವರ ಪರ ಜೈಘೋಷಗಳು ಮೊಳಗಿದವು. ಮೆರವಣಿಗೆಯು ಬಸವೇಶ್ವರ ವೃತ್ತಕ್ಕೆ ತಲುಪಿದ ನಂತರ ಸಮಾಪ್ತಿಗೊಂಡಿತು. ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನೂ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್, ತಾಪಂ ಇಒ ಮಹ್ಮದ್ ಅಕ್ರಂ ಪಾಷಾ, ಸಿಪಿಐ ಎಸ್.ಸಿ.ಪಾಟೀಲ, ಪಿಎಸ್‌ಐ ಮಂಜುನಾಥ ರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ, ಕೃಷಿ ಅಧಿಕಾರಿ ಸಂಜೀವಕುಮಾರ ಮಾನಕರೆ ಹಾಗೂ ಪಶು ವೈದ್ಯಾಧಿಕಾರಿ ಡಾ. ಶಂಕರ ಕಣ್ಣಿ ಉಪಸ್ಥಿತರಿದ್ದರು.
​ಜಯಂತಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಬೆಳಗುಂಪಾ, ಮಹಾಸಭಾ ತಾಲೂಕು ಗೌರವಾಧ್ಯಕ್ಷ ಲಿಂಗಾರೆಡ್ಡಿ ಭಾಸರೆಡ್ಡಿ, ಅಧ್ಯಕ್ಷ ನಾಗರಾಜ ಭಂಕಲಗಿ ಸೇರಿದಂತೆ ಮುಖಂಡರಾದ ಸೋಮಶೇಖರ ಪಾಟೀಲ ಬೆಳಗುಂಪಾ, ನಾಗರೆಡ್ಡಿ ಪಾಟೀಲ ಕರದಾಳ, ರಮೇಶ್ ಮರಗೋಳ, ಶಿವಾನಂದ ಪಾಟೀಲ, ಜಗಣ್ಣಗೌಡ ರಾಮತೀರ್ಥ, ವೀರಣ್ಣಗೌಡ ಪರಸರೆಡ್ಡಿ, ಭೀಮಣ್ಣ ಸಾಲಿ, ರವೀಂದ್ರ ಸಜ್ಜನಶೆಟ್ಟಿ, ಮಲ್ಲಿಕಾರ್ಜುನ ಕಾಳಗಿ, ಅಣ್ಣಾರಾವ ಪಾಟೀಲ ಮುಡಬೂಳ, ಕುಂಬಾರ ಸಮಾಜದ ಅಧ್ಯಕ್ಷ, ವಿಶ್ವನಾಥ ಕುಂಬಾರ ಹಾಗೂ ಸಾವಿರಾರು ಭಕ್ತಾದಿಗಳು ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.

ಶುಕ್ರವಾರ, ಏಪ್ರಿಲ್ 17, 2026

ಕುಂಬಾರ ಮಹಾಸಭಾದ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳಿಗೆ ಅದ್ಧೂರಿ ಸನ್ಮಾನ.

ಚಿತ್ತಾಪುರ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಅಖಿಲ ಭಾರತ ಕುಂಬಾರ ಮಹಾಸಭಾದ ತಾಲ್ಲೂಕು ಘಟಕದ ಸಭೆಯಲ್ಲಿ, ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ ಹಾಗೂ ವಿವಿಧ ಪದಾಧಿಕಾರಿಗಳಿಗೆ ಕುಂಬಾರ ಸಮಾಜದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.​ಅಖಿಲ ಭಾರತ ಕುಂಬಾರ ಮಹಾಸಭಾದ ತಾಲೂಕು ಅಧ್ಯಕ್ಷರಾಗಿ ನೇಮಕಗೊಂಡ ವಿಶ್ವನಾಥ ಎಸ್. ಕುಂಬಾರ ಅವರಿಗೆ ಸಮಾಜದ ಮುಖಂಡರು ಶಾಲು ಹೊದಿಸಿ, ಮಾಲಾರ್ಪಣೆ ಮಾಡಿ ಶುಭ ಹಾರೈಸಿದರು.
​ಅಧ್ಯಕ್ಷರ ಜೊತೆಗೆ ಸಂಘದ ವಿವಿಧ ಜವಾಬ್ದಾರಿಗಳಿಗೆ ಆಯ್ಕೆಯಾದ ಈ ಕೆಳಗಿನ ಪ್ರಮುಖರನ್ನು ಸಹ ಇದೇ ಸಂದರ್ಭದಲ್ಲಿ ಗೌರವಿಸಲಾಯಿತು ​ಗೌರವ ಅಧ್ಯಕ್ಷರಾಗಿ ಮಹಾದೇವ ಕುಂಬಾರ ಅಲ್ಲೂರ, ಮೋಗಲಪ್ಪ ಕುಂಬಾರ ಚಿತ್ತಾಪುರ, ಮಹಾದೇವ ಕುಂಬಾರ.​ಉಪಾಧ್ಯಕ್ಷರಾಗಿ ಆನಂದ ಕುಂಬಾರ ಚಿತ್ತಾಪುರ.​ಸಹ ಕಾರ್ಯದರ್ಶಿ ಬಸವರಾಜ ಕುಂಬಾರ. ನೇಮಕಗೊಂಡಿದ್ದಾರೆ.

​ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ವಿಶ್ವನಾಥ ಕುಂಬಾರ ಅವರು, ಸಮಾಜ ಬಾಂಧವರು ತನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು, ತಾಲ್ಲೂಕಿನಲ್ಲಿ ಕುಂಬಾರ ಸಮಾಜದ ಏಳಿಗೆಗಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.

​ಅಖಿಲ ಭಾರತ ಕುಂಬಾರ ಮಹಾಸಭಾ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಜಗದೇವ ಕುಂಬಾರ ಮಾತನಾಡಿ, ಸಂಘಟನೆಯ ಶಕ್ತಿ ಒಗ್ಗಟ್ಟಿನಲ್ಲಿದೆ. ಪದಾಧಿಕಾರಿಗಳು ಸಮಾಜದ ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿಗೆ ಒತ್ತು ನೀಡಬೇಕು ಎಂದು ಕರೆ ನೀಡಿದರು.

​ಈ ಸಮಾರಂಭದಲ್ಲಿ ಶ್ರೀಮಂತ ಕುಂಬಾರ, ಮಹಾದೇವ ಕುಂಬಾರ, ಬಸವರಾಜ ಕುಂಬಾರ, ಶರಣಪ್ಪ ಕುಂಬಾರ ಕರದಾಳ, ಶರಣಪ್ಪ ಕುಂಬಾರ, ಸಂಗಮೇಶ ಕುಂಬಾರ, ಆನಂದ ಮುಡಬೂಳಕರ್ ಕುಂಬಾರ, ರಾಜು ಕುಂಬಾರ, ಅಂಬರೀಶ್ ಕುಂಬಾರ, ರವಿ ಕುಂಬಾರ, ಮಲ್ಲಿಕಾರ್ಜುನ ಕುಂಬಾರ ಅಲ್ಲೂರ, ಮಲ್ಲಿಕಾರ್ಜುನ ಕುಂಬಾರ, ಸಿದ್ದಣ್ಣ ಕುಂಬಾರ, ಸುಭಾಷ ಕುಂಬಾರ, ಜಗದೀಶ್ ಕುಂಬಾರ, ಬಂಡೆಪ್ಪ ಕುಂಬಾರ, ಶರಣಪ್ಪ ಕುಂಬಾರ, ಶರಣಪ್ಪ ಎನ್. ಕುಂಬಾರ, ಮಲ್ಲಿಕಾರ್ಜುನ ಕುಂಬಾರ, ದಶರಥ್ ಕುಂಬಾರ, ಕಾಶಿನಾಥ್ ಕುಂಬಾರ ಬೆಣ್ಣೂರ, ಗುರುರಾಜ್ ಕುಂಬಾರ ಸೇರಿದಂತೆ ಸಮಾಜದ ನೂರಾರು ಕುಲಬಾಂಧವರು ಪಾಲ್ಗೊಂಡಿದ್ದರು.

ಕುಂಬಾರರ ಮಹಾಸಭಾದ ಅಧ್ಯಕ್ಷರಾಗಿ ವಿಶ್ವನಾಥ್ ಕುಂಬಾರ ನೇಮಕ

ಚಿತ್ತಾಪುರ: ಅಖಿಲ ಭಾರತ ಕುಂಬಾರರ ಮಹಾಸಭಾದ ಕರ್ನಾಟಕ ರಾಜ್ಯ ಘಟಕದ ವತಿಯಿಂದ ಚಿತ್ತಾಪುರ ತಾಲ್ಲೂಕು ಘಟಕಕ್ಕೆ ನೂತನ ಅಧ್ಯಕ್ಷರನ್ನಾಗಿ ಸಮಾಜ ಸೇವಕ ವಿಶ್ವನಾಥ್ ಎಸ್. ಕುಂಬಾರ ಅವರನ್ನು ನೇಮಕ ಮಾಡಲಾಗಿದೆ.

ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿಶ್ವನಾಥ್ ಅವರ ಬದ್ಧತೆ ಮತ್ತು ಕಾರ್ಯವೈಖರಿಯನ್ನು ಪರಿಗಣಿಸಿ, ಮಹಾಸಭಾದ ರಾಜ್ಯ ಅಧ್ಯಕ್ಷರಾದ ನಿತ್ಯಾಭರಣ ಚೌಡಶೆಟ್ಟಿ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಸಂಘಟನೆಯ ನಿಯಮಾವಳಿಗಳಿಗೆ ಬದ್ಧರಾಗಿ, ಶಿಸ್ತಿನಿಂದ ಸಮಾಜದ ಹಿತರಕ್ಷಣೆಗಾಗಿ ಕೆಲಸ ಮಾಡುವಂತೆ ಅವರಿಗೆ ಸೂಚಿಸಲಾಗಿದೆ.

ನೂತನ ಅಧ್ಯಕ್ಷರಿಗೆ ಸಂಘಟನೆಯು ಈ ಕೆಳಗಿನ ಪ್ರಮುಖ ಹೊಣೆಗಾರಿಕೆಗಳನ್ನು ನೀಡಿದೆ ತಾಲ್ಲೂಕು ಮಟ್ಟದಲ್ಲಿ ಕುಂಬಾರ ಸಮಾಜದ ಚಟುವಟಿಕೆಗಳನ್ನು ಮುನ್ನಡೆಸುವುದು. ಸಮಾಜದ ಯುವಶಕ್ತಿ ಹಾಗೂ ಹಿಂದುಳಿದ ವರ್ಗಗಳ ಏಳಿಗೆಗಾಗಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುವುದು. ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಮತ್ತು ಸಂಘಟನೆಗೆ ಬದ್ಧರಾಗಿರುವ ಸದಸ್ಯರನ್ನು ಆಯ್ಕೆ ಮಾಡಿ ಬಲಿಷ್ಠ ಸಮಿತಿಯನ್ನು ರಚಿಸುವುದು. ರಾಜ್ಯ ಮತ್ತು ರಾಷ್ಟ್ರೀಯ ನಾಯಕತ್ವದ ಮಾರ್ಗದರ್ಶನದಲ್ಲಿ ಸಂಘಟನೆಯನ್ನು ಸಂಘಟಿಸುವುದು.

"ವಿಶ್ವನಾಥ್ ಅವರ ನೇಮಕವು ತಾಲ್ಲೂಕಿನಲ್ಲಿ ಸಮಾಜದ ಸಂಘಟನೆಗೆ ಹೆಚ್ಚಿನ ಶಕ್ತಿ ನೀಡಲಿದೆ. ಅವರ ನೇತೃತ್ವದಲ್ಲಿ ಸಮಾಜದ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯಲಿ," ಎಂದು ಸಮಾಜದ ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.

ವಿಶ್ವನಾಥ್ ಎಸ್. ಕುಂಬಾರ ಅವರ ನೇಮಕಾತಿಗೆ ಸಮಾಜದ ವಿವಿಧ ಮುಖಂಡರು, ಯುವ ಮುಖಂಡರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದು, ಅವರ ಮುಂದಿನ ಸಮಾಜಮುಖಿ ಕಾರ್ಯಗಳಿಗೆ ಶುಭ ಹಾರೈಸಿದ್ದಾರೆ.

ಮೋದಿ-ಷಾ ಅಬ್ಬರಕ್ಕೆ ಬಂಗಾಳದ ಸರ್ವಾಧಿಕಾರಿ ಸರ್ಕಾರ ಧೂಳಿಪಟ; ಮಣಿಕಂಠ ರಾಠೋಡ.

ಚಿತ್ತಾಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರ ದಕ್ಷ ನಾಯಕತ್ವದ ಅಬ್ಬರಕ್ಕೆ ಪಶ್ಚಿಮ ಬಂಗಾಳದಲ್ಲಿ ಸರ್ವಾಧಿಕಾರಿಯಂತೆ ಮೆರೆಯುತ್ತಿದ...