ಚಿತ್ತಾಪುರ: ತಾಲೂಕಿನ ಸೂಗೂರ (ಎನ್) ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಭೋಜಲಿಂಗೇಶ್ವರ ದೇವಸ್ಥಾನದ ಲೋಕಾರ್ಪಣೆ, ಮೂರ್ತಿ ಪ್ರತಿಷ್ಠಾಪನೆ, ಬೆಳ್ಳಿ ರಥೋತ್ಸವ ಹಾಗೂ ಕಲ್ಯಾಣ ಮಂಟಪದ ಉದ್ಘಾಟನಾ ಸಮಾರಂಭವು ಏಪ್ರಿಲ್ 11ರಂದು ಅದ್ದೂರಿಯಾಗಿ ಜರುಗಲಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕುರುಬ ಸಮಾಜದ ಹಿರಿಯ ಮುಖಂಡ ಜುಮ್ಮಣ್ಣ ಪೂಜಾರಿ ಅವರು ಮನವಿ ಮಾಡಿದರು.
ಗುರುವಾರ ಪಟ್ಟಣದ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಶ್ರೀ ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠವು ಸರ್ವ ಜನಾಂಗದವರ ಆರಾಧ್ಯ ಕೇಂದ್ರವಾಗಿದೆ. ಈ ಭಾಗದ ಸಾವಿರಾರು ಭಕ್ತರ ಶ್ರದ್ಧಾ ಕೇಂದ್ರವಾಗಿರುವ ಈ ಮಠದ ನೂತನ ದೇವಸ್ಥಾನದ ಲೋಕಾರ್ಪಣೆ ಸಮಾರಂಭವು ಅತ್ಯಂತ ಸಂಭ್ರಮದಿಂದ ನಡೆಯಲಿದೆ" ಎಂದು ತಿಳಿಸಿದರು.
ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾದ ಭೀಮಣ್ಣ ಸಾಲಿ ಮಾತನಾಡಿ, "ಸ್ಥಳೀಯ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿಶೇಷ ಆಸಕ್ತಿ ಮತ್ತು ನೇತೃತ್ವದಲ್ಲಿ ಈ ಬೃಹತ್ ಕಾರ್ಯಕ್ರಮ ಸಂಘಟಿತವಾಗಿದೆ. ರಾಜ್ಯದ ಮುಖ್ಯಮಂತ್ರಿಗಳು ಆಗಮಿಸುತ್ತಿರುವುದು ಇಡೀ ತಾಲೂಕಿಗೆ ಹೆಮ್ಮೆಯ ವಿಷಯ. ಹೀಗಾಗಿ ಸಾರ್ವಜನಿಕರು ಮತ್ತು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು" ಎಂದು ಕೋರಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ಅಲ್ಪಸಂಖ್ಯಾತರ ಅಧ್ಯಕ್ಷ ಮುಕ್ತಾರ್ ಪಟೇಲ್, ಪುರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ ಕಾಶಿ, ಪಿಕೆಪಿಎಸ್ ಅಧ್ಯಕ್ಷ ಬಸವರಾಜ ಪೂಜಾರಿ, ಮುಖಂಡರಾದ ಶಿವರಾಜ್ ಕಲಗುರ್ತಿ, ಮನ್ಸೂರ್ ಪಟೇಲ್, ರಸೂಲ್ ಮುಸ್ತಫಾ, ಈರಪ್ಪ ಭೋವಿ, ಶಿವುಕುಮಾರ ಸುಲ್ತಾನಪೂರ, ಮಲ್ಲಿಕಾರ್ಜುನ ಬೆಣ್ಣೂರಕರ್, ಮಲ್ಲಿಕಾರ್ಜುನ ಹಣಿಕೇರಿ, ಶಿವಯೋಗಿ ಸಾಹು ಗುಂಡಗುರ್ತಿ, ಭೋಜು ಶೇರಿ, ಸಂಜಯ್ ಬುಳಕರ್, ಪ್ರದೀಪ್ ಕದ್ದರಗಿ, ದೇವು ನಾಲವಾರ, ಬೀರು ಪೂಜಾರಿ, ನಿಂಗು ಕಡಬೂರ, ನಾಗು ಗಂಗಾಣಿ, ಸೇರಿದಂತೆ ಇತರರು ಇದ್ದರು. ಉದಯಕುಮಾರ್ ಸಾಗರ ಸ್ವಾಗತಿಸಿದರು, ಸಂತೋಷ ಪೂಜಾರಿ ನಿರೂಪಿಸಿದರು.